ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಂತ್ರ್ಯ ಅಮೃತಮಹೋತ್ಸವವನ್ನು ವಿಶೇಷವಾಗಿ ಅಚರಿಸಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ.
ಆ.15 ರಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಬರೋಬ್ಬರಿ ಒಂದು ಲಕ್ಷ ಮಂದಿ ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆ ಮಾಡಲಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದರು.
ಇದು ಪಕ್ಷಾತೀತ ಕಾರ್ಯಕ್ರಮ. ಕುಟುಂಬ ಸಮೇತ ಎಲ್ಲರೂ ಭಾಗವಹಿಸಬಹುದು ಎಂದು ಅವರು ಇದೇ ಸಂದರ್ಭ ಹೇಳಿದರು.
ರಾಜ್ಯದ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ನಷ್ಟು ದೂರ ಪಾದಯಾತ್ರೆ ಹಮ್ಮಿಕೊಳ್ಳುವ ನಿರ್ಧಾರವನ್ನೂ ಅವರು ಇದೇ ವೇಳೆ ಪ್ರಕಟಿಸಿದರು.
ಪಾದಯಾತ್ರೆ ನಮ್ಮ ದೇಶದ ಗೌರವ, ಸ್ವಾಭಿಮಾನ ಪ್ರತೀಕವಾಗಿದೆ. ಹೀಗಾಗಿ ಪಾದಯಾತ್ರೆಗೆ ಒತ್ತು ನೀಡಲಾಗಿದೆ ಎಂದರು.
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು. ಪಾದಯಾತ್ರೆ ಬಳಿಕ ಸಂಜೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹರಿಹರನ್ ಅವರ ತಂಡದಿಂದ ದೇಶಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಪಕ್ಷದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.