ಜನವರಿ- ಫೆಬ್ರವರಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಮನೆ ಖಾಲಿಯಾಗಲಿದೆ: ಕಟೀಲ್ ಭವಿಷ್ಯ

ಹೊಸದಿಗಂತ ವರದಿ, ಮಂಡ್ಯ:
ಕಾಂಗ್ರೆಸ್ ಪಕ್ಷದಲ್ಲಿ ತಮ್ಮವರನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಜನವರಿ- ಫೆಬ್ರುವರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮನೆ ಖಾಲಿಯಾಗಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಭವಿಷ್ಯ ನುಡಿದರು.
ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೇರೆ ಪಕ್ಷಗಳ ಮುಖಂಡರನ್ನು ಆಹ್ವಾನಿಸುತ್ತಿದ್ದಾರೆ. ಮೊದಲು ತಮ್ಮ ಪಕ್ಷದವರನ್ನು ಹಿಡಿದಿಟ್ಟುಕೊಳ್ಳಲಿ, ನಂತರ ಬೇರೆಯವರನ್ನು ಆಹ್ವಾನಿಸಲಿ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಮೇಲೆ ಅವರ ಶಾಸಕರಿಗೆ ವಿಶ್ವಾಸ ಇಲ್ಲ, ಒಬ್ಬ ಮಾಜಿ ಸಿಎಂಗೆ ಚುನಾವಣೆಯಲ್ಲಿ ನಿಲ್ಲಲು ಕ್ಷೇತ್ರವಿಲ್ಲ. ಸಿದ್ದರಾಮಯ್ಯಗೇ ಕ್ಷೇತ್ರವಿಲ್ಲದಿರುವಾಗ ಪಕ್ಷದ ಶಾಸಕರಿಗೆ ನೆಲೆ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಪಕ್ಷ ಬಿಡಲು ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.
ಜಗತ್ತೇ ಬುಡಮೇಲಾದರೂ ಪಕ್ಷದಿಂದ ಹೊರ ಹೋದವರನ್ನು ಮತ್ತೆ ವಾಪಸ್ಸು ಕರೆದುಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಡಿ.ಕೆ. ಶಿವಕುಮಾರ್ ಅವರು ಹೇಳಿಕೆಯಿಂದ ಪಕ್ಷ ಅತಂತ್ರ ಸ್ಥಿತಿಯಲ್ಲಿದೆ ಎಂಬುದು ಗೊತ್ತಾಗುತ್ತೆ ಎಂದು ಲೇವಡಿ ಮಾಡಿದರು.
ಹೊರ ಹೋದವರನ್ನು ಕರೆಯುವುದಿಲ್ಲ ಎಂದು ಹೇಳಿದ್ದವರು ಮತ್ತೆ ಈಗ ವಾಪಸ್ಸು ಕರೆಯುತ್ತಿದ್ದಾರೆ ಎಂದರೆ, ಕಾಂಗ್ರೆಸ್‌ನವರ ಪರಿಸ್ಥಿತಿ ಹೇಗಿರಬೇಕು ಎಂಬುದು ತಿಳಿಯುತ್ತದೆ ಎಂದರು.
ಮಂಡ್ಯ ಜಿಲ್ಲೆಯಲ್ಲೂ ಸಂಘಟನೆ ಭದ್ರವಾಗಿದೆ. ನಾವು ಬೇರೆಯವರ ರೀತಿ ಬಂಡೆ, ಹುಲಿಯಾ ಎಂದು ರಾಜಕಾರಣ ಮಾಡುವುದಿಲ್ಲ. ಕಾರ್ಯಕರ್ತರ ಹೃದಯ ಗೆಲ್ಲಲ್ಲು ಪ್ರಯತ್ನಿಸುತ್ತೇವೆ. ಸಂಘಟನಾ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅದರಲ್ಲಿ ಯಾವುದೇ ಕೊರತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅನೇಕ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಲು ಬೇರೆ ಬೇರೆ ಹಂತಗಳಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರೂ ಸಹ ಮಾತುಕತೆ ಮಾಡುತ್ತಿದ್ದಾರೆ. ಎಲ್ಲವನ್ನೂ ಕಾದು ನೋಡಿ ಎಂದು ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಹಳೇ ಮೈಸೂರು ಭಾಗದಲ್ಲಿ ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ ಕಳೆಗುಂದಿತ್ತು. ಅದರಲ್ಲೂ ವಿಶೇಷವಾಗಿ ಮಂಡ್ಯದಲ್ಲಿ ಉಪ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಶಾಸಕರು ಆಯ್ಕೆಯಾಗುವ ಮೂಲಕ ಶಕ್ತಿ ದೊರೆತಿದೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಮೂರ್ನಾಲ್ಕು ಮಂದಿ ಶಾಸಕರು ಆಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಬಗ್ಗೆ ಜನರಿಗೆ ನಿರಾಸೆಯುಂಟಾಗಿದೆ. ಜೆಡಿಎಸ್ ಕುಟುಂಬಕ್ಕೆ ಸೀಮಿತವಾಗಿದೆ. ಎರಡೂ ಪಕ್ಷಗಳನ್ನು ತೊರೆದು ಜನ ನಮ್ಮ ಪಕ್ಷದತ್ತ ಬರುತ್ತಿದ್ದಾರೆ. ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಯೋಜನೆ, ಅನುಷ್ಠಾನ ಅಭಿವೃದ್ಧಿ ಕಾರ‌್ಯಗಳು ಜನಮನ ಸೆಳೆಯುತ್ತಿದೆ. ರಾಜ್ಯದಲ್ಲೂ ಸಹ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಉತ್ತಮವಾಗಿ ಆಡಳಿತ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಜನ ನಮ್ಮ ಪಕ್ಷದ ಪರವಾಗಿದ್ದಾರೆ ಎಂದು ಹೇಳಿದರು.
ಚಂದ್ರಶೇಖರ್ ಸಾವು ಅನುಮಾನಾಸ್ಪದ :
ರೇಣುಕಾಚಾರ್ಯ ಅವರ ತಮ್ಮನ ಮಗನ ಸಾವು ಅನುಮಾನಾಸ್ಪದವಾಗಿದೆ. ಈ ದುರ್ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.
ಈ ಬಗ್ಗೆ ನಮ್ಮ ಸರ್ಕಾರ ತನಿಖೆಯನ್ನು ತೀವ್ರಗೊಳಿಸಿದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಎಲ್ಲಾ ಹಂತದಲ್ಲೂ ತನಿಖೆ ನಡೆಸುತ್ತಿದ್ದಾರೆ. ಬಹಳಷ್ಟು ಅನುಮಾನಗಳು ಇವೆ. ನಮಗೂ ಸಹ ಈ ಸಾವಿನ ಬಗ್ಗೆ ಅನುಮಾನ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಜಿಲ್ಲಾ ಉಸ್ತುವಾರಿ ಜಗದೀಶ್ ಹಿರೇಮನಿ, ಮುಖಂಡರಾದ ಡಾ. ಸಿದ್ದರಾಮಯ್ಯಘಿ, ಇಂದ್ರೇಶ್, ಮುನಿರಾಜು, ಅರುಣ್‌ಕುಮಾರ್, ಸುರೇಶ್, ಎಸ್.ಪಿ. ಸ್ವಾಮಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!