ಹೊಸದಿಗಂತ ಡಿಜಿಟಲ್ ಡೆಸ್ಕ್
34 ವರ್ಷದ ಹಿಂದೆ ನಡೆದ ರಸ್ತೆ ಜಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಗೆ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಶಿಕ್ಷೆ ವಿಧಿಸಲಾಗಿದೆ. ನವಜೋತ್ ನಡೆಸಿದ ದಾಂಧಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಎಂಬ ವೃದ್ಧ ಮೃತಪಟ್ಟಿದ್ದರು. ಈ ಸಂಬಂಧ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದು ಸಿಧುಗೆ 3 ವರ್ಷ ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2018ರಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ್ಯಾಯಪೀಠವು ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿಯಲ್ಲಿ ಸಿಧು ಅಪರಾಧಿ ಎಂದು ತೀರ್ಪು ನೀಡಿ 1000 ರೂಪಾಯಿ ಜುಲ್ಮಾನೆ ವಿಧಿಸಿತ್ತು. ಆದರೆ ಸಿಧುಗೆ ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಲಾಗಿತ್ತು.
ಈ ತೀರ್ಪು ಪ್ರಶ್ನಿಸಿ ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಸ್ಕರಿಸಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನವಜೋತ್ ಸಿಂಗ್ ಸಿಧುಗೆ ಶಿಕ್ಷೆ ಪ್ರಕಟಿಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ