ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ,ಬಾಂಗ್ಲಾದೇಶಕ್ಕೆ ಕಠಿಣ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ.
‘ಪ್ರಿಯಾಂಕಾ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಿ. ಆಗ ಅವರು ಇಂದಿರಾ ಗಾಂಧಿ ಅವರಂತೆ ಹೇಗೆ ಪ್ರತೀಕಾರ ತೀರಿಸಿಕೊಳ್ಳುತ್ತಾರೆಂದು ನೋಡಿ. ಪ್ರಿಯಾಂಕಾ ಗಾಂಧಿ ತಮ್ಮ ಹೆಸರಿನ ಹಿಂದೆ ಗಾಂಧಿಯನ್ನು ಸೇರಿಸಿಕೊಂಡಿದ್ದಾರೆ. ಅವರು ಇಂದಿರಾ ಗಾಂಧಿಯ ಮೊಮ್ಮಗಳು. ಇಂದಿರಾ ಗಾಂಧಿ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರಗಳನ್ನು ನೀಡಿದವರು. ಆ ಗಾಯಗಳು ಇನ್ನೂ ವಾಸಿಯಾಗಿಲ್ಲ. ಅವರನ್ನು ಪ್ರಧಾನಿಯನ್ನಾಗಿ ಮಾಡಿ ಮತ್ತು ಅವರು ಹೇಗೆ ಪ್ರತೀಕಾರ ತೀರಿಸಿಕೊಳ್ಳುತ್ತಾರೆಂದು ನೋಡಿ’ ಎಂದು ಹೇಳಿದರು.
ಇತ್ತೀಚೆಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬಾಂಗ್ಲಾದೇಶದಲ್ಲಿ ಹಿಂದು ಯುವಕ ದೀಪು ಚಂದ್ರದಾಸ್ ಅವರ ಹತ್ಯೆಯ ನಂತರ ಹಿಂದು, ಕ್ರಿಶ್ಚಿಯನ್ ಮತ್ತು ಬೌದ್ಧ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರವನ್ನು ಗಮನಿಸುವಂತೆ ಕೇಂದ್ರವನ್ನು ಆಗ್ರಹಿಸಿದ್ದರು.
ಇದೀಗ ಇಮ್ರಾನ್ ಮಸೂದ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ರಾಹುಲ್ ಗಾಂಧಿ ಹೆಸರು ಹೇಳಿ ಕಾಂಗ್ರೆಸ್ನ ಕಾಲೆಳೆದಿದೆ. ಕಾಂಗ್ರೆಸ್ ನಾಯಕರಿಗೇ ರಾಹುಲ್ ಗಾಂಧಿ ಮೇಲೆ ನಂಬಿಕೆ ಇಲ್ಲ ಎಂದು ವ್ಯಂಗ್ಯವಾಡಿದೆ.

