April 25, 2026
Saturday, April 25, 2026
spot_img

ಉಪಚುನಾವಣೆಗೆ ಟಾಸ್ಕ್ ಫೋರ್ಸ್ ರೆಡಿ ಮಾಡಿದ ಕಾಂಗ್ರೆಸ್: ಅಖಾಡಕ್ಕಿಳಿದ ಘಟಾನುಘಟಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪಚುನಾವಣೆ ಹಿನ್ನೆಲೆ ರಾಜ್ಯ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್ ಹೈ ಕಮಾಂಡ್ ಗಡಿಜಿಲ್ಲೆಯ ಪ್ರಮುಖ ನಾಯಕರಿಗೆ ಗೆಲುವಿನ ಹೊಣೆಗಾರಿಕೆ ನೀಡಿದೆ. ಸೂಚನೆ ಹೊರಬಿದ್ದ ತಕ್ಷಣವೇ ಸ್ಥಳೀಯ ನಾಯಕರು ಕಾರ್ಯತಂತ್ರ ರೂಪಿಸಿ ಮೈದಾನಕ್ಕಿಳಿದಿದ್ದಾರೆ.

ಬಾಗಲಕೋಟೆ ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನೀಡಲಾಗಿದೆ. ಇದೇ ವೇಳೆ ದಾವಣಗೆರೆ ಕ್ಷೇತ್ರದಲ್ಲಿ ಗೆಲುವಿನ ಹೊಣೆಗಾರಿಕೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಹಂಚಲಾಗಿದೆ. ಈ ಎರಡು ಕ್ಷೇತ್ರಗಳಲ್ಲೂ ಪ್ರಚಾರಕ್ಕೆ ತೂಕ ಹೆಚ್ಚಿಸಲು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರನ್ನು ಸ್ಟಾರ್ ಪ್ರಚಾರಕರಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ:

ಸಂಘಟನಾ ಸಾಮರ್ಥ್ಯ ಮತ್ತು ಚುನಾವಣಾ ಅನುಭವವನ್ನು ಗಮನದಲ್ಲಿಟ್ಟುಕೊಂಡು ಈ ಮೂವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ವಲಯದಲ್ಲಿ ಹೇಳಲಾಗುತ್ತಿದೆ. ಜಿದ್ದಾಜಿದ್ದಿನ ರಾಜಕೀಯ ಹೋರಾಟಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಈ ನಾಯಕರು, ಮತದಾರರನ್ನು ಸೆಳೆಯಲು ವಿವಿಧ ತಂತ್ರಗಳನ್ನು ರೂಪಿಸುತ್ತಿದ್ದಾರೆ.

ಲಿಂಗಾಯತ ಹಾಗೂ ಅಹಿಂದ ಮತಬ್ಯಾಂಕ್‌ಗಳನ್ನು ಗುರಿಯಾಗಿಸಿಕೊಂಡು ಕಾರ್ಯತಂತ್ರ ರೂಪಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಸಾಧಿಸಲು ಈ ನಾಯಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಚುನಾವಣೆ ಫಲಿತಾಂಶಗಳು ರಾಜ್ಯ ರಾಜಕೀಯದ ದಿಕ್ಕನ್ನು ನಿರ್ಧರಿಸುವ ಸಾಧ್ಯತೆ ಇರುವುದರಿಂದ ಈ ಕ್ಷೇತ್ರಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !