February 16, 2026
Monday, February 16, 2026
spot_img

ಕೇರಳದಲ್ಲಿ ಕಾಂಗ್ರೆಸ್ ಗೆಲ್ಲಲ್ಲ…ಮತ್ತೆ ಕೈ ನಾಯಕರ ವಿರುದ್ಧ ಗುಡುಗಿದ ಮಣಿಶಂಕರ್‌ ಅಯ್ಯರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಹೇಳಿಕೆ ನೀಡಿದ್ದು, ಹೊಸ ಚರ್ಚೆ ಹುಟ್ಟುಹಾಕಿದೆ.

ಖಾಸಗಿ ಚಾನಲ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್, ಶಶಿ ತರೂರ್, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಸೇರಿದಂತೆ ಪಕ್ಷದ ಕೆಲವು ಹಿರಿಯ ಸಹೋದ್ಯೋಗಿಗಳ ನಡೆಯನ್ನು ಟೀಕಿಸಿದ್ದು, ಕಾಂಗ್ರೆಸ್ ನಾಯಕರು ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ನಾನು ಕಾಂಗ್ರೆಸ್ ಗೆಲ್ಲಬೇಕೆಂದು ಬಯಸುತ್ತೇನೆ, ಆದರೆ ಕಾಂಗ್ರೆಸ್ ನಾಯಕರು ವಿಭಜನೆಗೊಂಡಿರುವುದರಿಂದ ಅದು ಗೆಲ್ಲುತ್ತದೆ ಎಂದು ನಾನು ನಂಬುವುದಿಲ್ಲ. ಅವರು ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ ಎಂದು ಟೀಕಿಸಿದರು.

ಪಕ್ಷದ ನಾಯಕ ಪವನ್ ಖೇರಾ ಅವರನ್ನು ‘ಕೈಗೊಂಬೆ’ ಎಂದು ಕರೆದ ಅಯ್ಯರ್, ಕಳೆದ ಎರಡು ವರ್ಷಗಳಿಂದ ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಪವನ್ ಖೇರಾ ಹೊರತುಪಡಿಸಿ ಬೇರೆ ಯಾರೂ ವಕ್ತಾರರಾಗಲು ಸಾಧ್ಯವಾಗದಿದ್ದರೆ, ಅದು ಈಗಿರುವ ಸ್ಥಿತಿಯಲ್ಲಿಯೇ ಇರುತ್ತದೆ ಎಂದು ಅವರು ಹೇಳಿದರು.

ಇದೇ ವೇಳೆ ತಿರುವನಂತಪುರಂ ಸಂಸದ ಶಶಿ ತರೂರ್ ಅವರ ಕುರಿತು ಮಾತನಾಡಿದ ಅವರು, ಆಪರೇಷನ್ ಸಿಂದೂರ್‌ನಂತಹ ವಿಷಯಗಳಲ್ಲಿ ಪಕ್ಷದ ನಾಯಕತ್ವದೊಂದಿಗೆ ತಮ್ಮ ನಿಲುವಿಗಾಗಿ ಜಗಳವಾಡಿದ್ದಾರೆ. ಶಶಿ ತರೂರ್ ‘ಮುಂದಿನ ವಿದೇಶಾಂಗ ಸಚಿವ’ ಆಗುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾರೆ ಎಂದು ಟೀಕಿಸಿದರು.

ಇತ್ತೀಚಿನ ದಿನಗಳಲ್ಲಿ ತಮ್ಮ ಹೇಳಿಕೆಗಳಿಂದ ಸುದ್ದಿಯಾಗಿದ್ದ ಅಯ್ಯರ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ರಾಜ್ಯ ಚುನಾವಣೆಗೆ ತಿಂಗಳುಗಳ ಮೊದಲು ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಗಳಿದ್ದು, ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿತ್ತು.

ಇತ್ತ ಮಣಿಶಂಕರ್ ಅಯ್ಯರ್ ಹೇಳಿಕೆಗೆ ಪಕ್ಷದ ನಾಯಕ ಪವನ್ ಖೇರಾ ರಿಯಾಕ್ಷನ್ ನೀಡಿದ್ದು, ಕಳೆದ ಕೆಲವು ವರ್ಷಗಳಿಂದ ಮಣಿಶಂಕರ್ ಅಯ್ಯರ್ ಅವರು ಕಾಂಗ್ರೆಸ್‌ನೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಅವರು ಸಂಪೂರ್ಣವಾಗಿ ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಮಾತನಾಡುತ್ತಾರೆ ಮತ್ತು ಬರೆಯುತ್ತಾರೆ ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !