ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದಾಗಿ ಇಂದು ಬೆಳಗ್ಗೆ ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧ್ರುವನಾರಾಯಣ್ ನಿಧನ ಹಿನ್ನಲೆ ಕಾಂಗ್ರೆಸ್ ಪ್ರಚಾರ ರದ್ದಾಗಿದ್ದು, ಇವರ ನಿಧನಕ್ಕೆ ಸಿದ್ದರಾಮಯ್ಯ, ಡಿಕೆಶಿ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ʻನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ. ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ.ʼ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಡಿಕೆಶಿ ಟ್ವೀಟ್ ಮಾಡಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಧ್ರುವನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಎಂದು ನೆನಪಿಸಿಕೊಂಡರು.
ಧ್ರುವನಾರಾಯಣ್ ನಿಧನಕ್ಕೆ ಹೆಚ್ಡಿಕೆ ಸಂತಾಪ ಸೂಚಿಸಿದ್ದು, ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇವರ ಜೊತೆಗೆ ಶಾಸಕ ಜಿ.ಟಿ.ದೇವೇಗೌಡ, ಸತೀಶ್ ಜಾರಕಿಹೊಳಿ, ಎಸ್ಆರ್ ಪಾಟೀಲ್, ಹಲವರು ಸಂತಾಪ ಸೂಚಿಸಿದ್ದಾರೆ.