ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾಸನ ನಗರದ ಬೂವನಹಳ್ಳಿ ಸಮೀಪ ನಡೆದ ಜೆಡಿಎಸ್ ಬೆಳ್ಳಿ ಹಬ್ಬದ ಸಂಭ್ರಮ ಬೃಹತ್ ಜನತಾ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು, ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎಚ್.ಡಿ. ರೇವಣ್ಣ ಮತ್ತು ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ಪಿತೂರಿ ನಡೆಸಿದೆ . ಜೆಡಿಎಸ್ ಹಾಗೂ ರೇವಣ್ಣ ಕುಟುಂಬವನ್ನು ಮುಗಿಸಲು ನಡೆದ ಎಲ್ಲಾ ಕುತಂತ್ರಗಳನ್ನು ರಾಜ್ಯದ ಜನರು ನೋಡಿದ್ದಾರೆ ಎಂದು ಹೇಳಿದರು.
ರೇವಣ್ಣ ಅವರನ್ನು ಬಂಧಿಸಲು ಎಸ್ಐಟಿ ತಂಡ ತಮ್ಮ ಮಗಳು ಶೈಲಜಾ ಅವರ ಬೆಂಗಳೂರಿನ ನಿವಾಸಕ್ಕೆ ಬಂದಿದ್ದನ್ನು ನೆನಪಿಸಿಕೊಂಡರು. ‘ಕಾಡುಗಳ್ಳ ವೀರಪ್ಪನ್ ಅವರನ್ನು ಸೆರೆಹಿಡಿದ ತಂಡಕ್ಕೆ ಬಹುಮಾನ ನೀಡಲಾಗಿತ್ತು ಎಂದು ನಾನು ಕೇಳಿದ್ದೇನೆ.ಆದರೆ ಈಗ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದವರಿಗೆ ಬಹುಮಾನ ನೀಡಿದೆ’ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಹಾಸನದಲ್ಲಿ ನಡೆದ ಸಮಾವೇಶದ ಮೂಲಕ, ಜೆಡಿಎಸ್ ಇನ್ನೂ ಬಲಿಷ್ಠವಾಗಿದೆ ಮತ್ತು ಅದರ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ಕಳುಹಿಸಿದೆ ಎಂದರು. ಹಾಸನಕ್ಕೆ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ತರುವುದು ಮತ್ತು ಬಡ ಕುಟುಂಬಗಳನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ತಮ್ಮ ಕನಸು ಎಂದು ದೇವೇಗೌಡ ತಿಳಿಸಿದರು. ಮೋದಿ ಆಡಳಿತದಲ್ಲಿ ದೇಶದ ಆರ್ಥಿಕತೆ ಹದಗೆಟ್ಟಿದೆ ಎಂದು ಹೇಳಿದ್ದಕ್ಕಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಅವರು ಟೀಕಿಸಿದರು.




