ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಮನೆ ಬಳಿ ಸೇತುವೆ, ರಸ್ತೆ ನಿರ್ಮಾಣ: ರೂಪಾಲಿ ನಾಯ್ಕ ಭರವಸೆ

ಹೊಸದಿಗಂತ ವರದಿ, ಕಾರವಾರ:

ಅಂಕೋಲಾ ತಾಲೂಕಿನ ಹೊನ್ನಳ್ಳಿಯಲ್ಲಿನ ಪದ್ಮಶ್ರೀ ತುಳಸಿ ಗೌಡ ಅವರ ನಿವಾಸ ಸಂಪರ್ಕಿಸುವ ಕಿರು ಸೇತುವೆಗೆ 25 ಲಕ್ಷ ರೂ. ಹಾಗೂ ರಸ್ತೆಗೆ 15 ಲಕ್ಷ ರೂ. ಮಂಜೂರಾಗಿದ್ದು, ಮಳೆಗಾಲದ ತರುವಾಯ ಕಾಮಗಾರಿ ಶುರುವಾಗಲಿದೆ. ತುಳಸಿ ಗೌಡ ಅವರ ಸಂಚಾರಕ್ಕಾಗಿ ತಾತ್ಕಾಲಿಕ ಸೇತುವೆಯನ್ನು ವಾರದೊಳಗೆ ನಿರ್ಮಿಸಲಾಗುವುದು ಶಾಸಕಿ ರೂಪಾಲಿ ಎಸ್.ನಾಯ್ಕ ಭರವಸೆ ನೀಡಿದ್ದಾರೆ.
ಹೊಸ ದಿಗಂತ ಆನ್ ಲೈನ್ ನಲ್ಲಿ ಬಂದ ಪದ್ಮಶ್ರಿ ತುಳಸಜ್ಜಿಗೆ ಮೊಳಕಾಲು ನೀರು ದಾಟುವ ಸಂಕಟ ಎಂಬ ವರದಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕರು,ತುಳಸಿ ಗೌಡ ಅವರ ನಿವಾಸದ ಬಳಿ ಸೇತುವೆ ಹಾಗೂ ರಸ್ತೆಗಾಗಿ 40 ಲಕ್ಷ ರೂ. ಮಾರ್ಚ 2022ರಲ್ಲೇ ಮಂಜೂರಾಗಿದೆ. ಇದನ್ನು ತಾವು ತುಳಸಿ ಗೌಡ ಅವರ ಗಮನಕ್ಕೂ ತಂದಿದ್ದೆ. ಆದರೆ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭವಾಗಿಲ್ಲ. ನಂತರ ಮಳೆ ಬಂದಿದ್ದರಿಂದ ಮತ್ತೆ ವಿಳಂಬವಾಯಿತು. ವೃಕ್ಷಮಾತೆ ತುಳಸಿ ಗೌಡ ಅವರ ಮನವಿ ಹಿನ್ನೆಲೆಯಲ್ಲಿ ಈ ರಸ್ತೆ ಹಾಗೂ ಸೇತುವೆ ಕಾಮಗಾರಿಯನ್ನು ಮಂಜೂರು ಮಾಡಲಾಗಿತ್ತು.
ಎಲ್ಲೆಡೆ ಭಾರಿ ಮಳೆ ಬೀಳುತ್ತಿದೆ. ಪದ್ಮಶ್ರೀ ತುಳಸಿ ಗೌಡ ಅವರ ನಿವಾಸದ ಬಳಿಯೂ ನೀರು ತುಂಬಿರುವುದನ್ನು ಗಮನಿಸಿದ್ದೇನೆ. ಅವರಿಗೆ ಸಂಚಾರಕ್ಕೆ ತೊಂದರೆಯಾಗದಂತೆ ವಾರದೊಳಗೆ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿಕೊಡಲಾಗುವುದು. ಮಳೆಗಾಲ ಮುಗಿದ ತರುವಾಯ ಶಾಶ್ವತ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಲಿದೆ. ವೃಕ್ಷಮಾತೆ ತುಳಸಿ ಗೌಡ ಹಾಗೂ ಹಾಡುಹಕ್ಕಿ ಸುಕ್ರಿ ಗೌಡ ಅವರು ನಮ್ಮ ಕ್ಷೇತ್ರದ ಹೆಮ್ಮೆಯಾಗಿದ್ದು ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!