ಹೊಸದಿಗಂತ ವರದಿ ಹಾವೇರಿ:
ಹಾವೇರಿ ಜಿಲ್ಲೆಯಲ್ಲಿ ಕಾರ್ಮಿಕರ ಅನುಕೂಲಕ್ಕಾಗಿ ಐದು ಸ್ಥಳಗಳಲ್ಲಿ ಸುಸಜ್ಜಿತ ಕಾರ್ಮಿಕ ಭವನ ನಿರ್ಮಾಣ ಮಾಡಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು.
ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಹಾವೇರಿ, ಶಿಗ್ಗಾಂವ, ಹಿರೇಕೆರೂರ, ರಟ್ಟಿಹಳ್ಳಿ ಹಾಗೂ ಬ್ಯಾಡಗಿ ತಾಲೂಕುಗಳಲ್ಲಿ ಕಾರ್ಮಿಕ ಭವನ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ರಾಣೇಬೆನ್ನೂರ ನಗರಕ್ಕೆ ಕಾರ್ಮಿಕರಿಗಾಗಿ ಇಎಸ್? ಆಸ್ಪತ್ರೆಯನ್ನು ಸ್ಥಳಾಂತರಿಸಲಾಗಿದೆ. ಕಾರ್ಮಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಮೊಟ್ಟಮೊದಲಬಾರಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 600ಕ್ಕಿಂತ ಅಧಿಕ ಅಂಕಪಡೆದ ಮಕ್ಕಳಿಗೆ 10 ಸಾವಿರ ರೂ ಪ್ರೋತ್ಸಾಹಧನ ನೀಡಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ 143 ಮಕ್ಕಳು ಇದರ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸತತ ಏಳು ತಿಂಗಳು ಆದ ಮಳೆಯಿಂದ ರಸ್ತೆಗಳು ಬಹಳ ಪ್ರಮಾಣದಲ್ಲಿ ಹಾಳಾಗಿವೆ. ಇವುಗಳ ತುರ್ತು ದುರಸ್ತಿಗೂ ಸಮಯವ್ನನು ನೀಡದ ಕಾರಣಕ್ಕೆ ದುರಸ್ತಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ರಸ್ತೆಗಳ ದುರಸ್ತಿಗೆ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಗೆ ಮೆಡಿಕಲ್ ಕಾಲೇಜು, ಮೆಗಾ ಹಾಲುಡೈರಿ, ಜವಳಿ ಪಾರ್ಕ್, ಕಾನೂನು ಮಹಾವಿದ್ಯಾಲಯ ಸೇರಿದಂತೆ ಹತ್ತು ಹಲವು ವಿನೂತನ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಜಲಜೀವನ್ ಮೀಷನ್ ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವುದಕ್ಕೆ ಕ್ರಮ, ಬೃಹತ್ ನೀರಾವರಿ ಯೋಜನೆಗಳು ಸೇರಿದಂತೆ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಸಾವಿರಾರು ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಅನುಸೂಚಿತ ಜಾತಿ ಹಾಗೂ ಬುಡಕಟ್ಟು ಆಯೋಗಗಳ ಅಧ್ಯಕ್ಷ ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪಂಚಾಯತ್ ಸಿಇಒ ಮಹಮ್ಮದ್ ರೋಷನ್ ಇದ್ದರು.