ಹೊಸ ದಿಗಂತ ವರದಿ ವಿಜಯಪುರ:
ಪ್ರಧಾನಿ ನರೇಂದ್ರ ಮೋದಿಯವರಿಗೆ ನಾಲಾಯಕ್ ಎಂದು ಅವಹೇಳನ ಮಾಡಿರುವುದು, ಅವರ ತಂದೆಯ ಸಂಸ್ಕೃತಿ ಮಗನಿಗೆ ಬಂದಿದೆ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಪರೋಕ್ಷವಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಕಿಡಿಕಾರಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ 420 ಗ್ಯಾರಂಟಿ ಕಾರ್ಡ್ ಆಗಿದೆ. ವಿವಿಧ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನತೆ ತಿರಸ್ಕಾರ ಮಾಡಿದೆ. ಕಾಂಗ್ರೆಸ್ ಮುಳುಗುವ ಹಡಗು ಆಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಜನತೆ ತಕ್ಕಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಈ ಬಾರಿ ಕರ್ನಾಟಕದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ರಾಜ್ಯದಲ್ಲಿ 150 ಸೀಟ್ಗಳನ್ನು ಬಿಜೆಪಿ ಗೆಲುವು ಸಾಧಿಸಿ, ಬಹುಮತದಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು.
ಈಗಾಗಲೇ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಆಗಿದ್ದು, ಪ್ರಣಾಳಿಕೆಯಲ್ಲಿ ಯುವಕರು, ಮಹಿಳೆಯರಿಗೆ, ರೈತರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಹಬ್ಬಕ್ಕೆ ಮೂರು ಉಚಿತ ಸಿಲಿಂಡರ್ ನೀಡಲಾಗುತ್ತದೆ ಎಂದರು.
ಇದೇ ಸಂದರ್ಭ ಬಿಜೆಪಿ ಪ್ರಣಾಳಿಕೆ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.
ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮುಖಂಡ ಸುರೇಶ ಬಿರಾದಾರ, ವಿವೇಕ ಡಬ್ಬಿ, ಪರಶುರಾಮ ರಜಪೂತ, ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.