ಹೊಸ ದಿಗಂತ ವರದಿ, ಬೆಳಗಾವಿ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೂ ಓರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ, ಸಂಘದ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಹೇಳಿದರು.
ಇಲ್ಲಿನ ಸುವರ್ಣ ವಿಧಾನಸೌಧದ ಬಳಿ ಹಮ್ಮಿಕೊಂಡಿದ್ದ ಗುತ್ತಿಗೆದಾರರ ಸಂಘದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರ ಬಂದು ಎಂಟು ತಿಂಗಳು ಆಗಿದೆ. ಇನ್ನೂ ಕೆಲಸಗಳೂ ಆರಂಭಗೊಂಡಿಲ್ಲ. ಹೀಗಾಗಿ ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ಕೆಲಸಗಳು ಆರಂಭವಾಗಲಿ. ಇವರು ಹಣೆಬರಹ ಗೊತ್ತಾಗುತ್ತದೆ ಎಂದು ಕೆಂಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ನಮ್ಮ ಸಂಘದ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುತ್ತೇವೆ. ಬೆಳಗಾವಿಯಲ್ಲಿ ಆಗಿದೆ. ಮುಂದೆ ಕಲಬುರ್ಗಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಕಳೆದ ಬಾರಿ ಬಿಜೆಪಿ ಸರಕಾರದ ಅವಧಿಯಲ್ಲಿನ ಆರೋಪಗಳಿಗೆ ಸಂಬಂಧಿಸಿದಂತೆ ತನಿಖಾ ಆಯೋಗದ ಎದುರು ದಾಖಲೆಗಳನ್ನು ಸಲ್ಲಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಕೆಂಪಣ್ಣ ಆಗ್ರಹಿಸಿದರು.
ಕೆಲ ಗುತ್ತಿಗೆದಾರ ಚೇಲಾಗಳು ಕೆಲವು ಸಚಿವರ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಓರ್ವ ಮಂತ್ರಿ ಅಂತೂ ತುಂಡು ಗುತ್ತಿಗೆಗೆ ಪಟ್ಟು ಹಿಡಿದು ಫೈಲ್ ಹಿಡಿದು ಓಡಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಭೇಟಿ ಮಾಡಿದಾಗ ಹೆಸರು ಹೇಳುತ್ತೇನೆ ಎಂದು ಹೇಳಿದರು.
ಗುತ್ತಿಗೆದಾರರ ಸಂಘದ ಕಷ್ಟಗಳು ಮುಂದುವರೆದಿವೆ. ಸರ್ಕಾರ ಸ್ಪಂದಿಸುತ್ತಿದೆ. ಸ್ವಲ್ಪ ಸ್ವಲ್ಪ ಪೇಮೆಂಟ್ ಆಗುತ್ತಿದೆ. ಆದರೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಕೆಂಪಣ್ಣ ಆರೋಪಿದರು.