ಹೊಸದಿಗಂತ ಡಿಜಿಟಲ್ ಡೆಸ್ಕ್:
ದಂಗೆ ಬಿಸಿಯಲ್ಲಿ ಧಗದಘಿಸುತ್ತಿರುವ ಲಂಕೆಯಲ್ಲಿನ ಸಂಘರ್ಷ ನಿಯಂತ್ರಿಸಲು ತಕ್ಷಣ ಮುಂದಾಗಿ ಎಂದು ಭದ್ರತಾಪಡೆಗಳಿಗೆ ಆದೇಶ ನೀಡಲಾಗಿದೆ ಎಂದು ಶ್ರೀಲಂಕಾ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.
ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಂಕೆಯಲ್ಲಿ ಮತ್ತೆ ಶಾಂತಿ ಸ್ಥಾಪಿಸಲು ಅನುಕೂಲವಾಗುವಂತೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಶಸ್ತ್ರ ಪಡೆಗಳು ಮತ್ತು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನಾಗರಿಕರ ಪ್ರತಿಭಟನೆಗೆ ಅಂಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ದೇಶ ತೊರೆದಿರುವ ಬೆನ್ನಲ್ಲೇ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಈ ವಿಚಾರವನ್ನು ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಘೋಷಿಸಿದ್ದರು.