ಹೊಸದಿಗಂತ ವರದಿ, ಕಾರವಾರ :
ಶಿವಮೊಗ್ಗ ಹಾಗೂ ಬೀದರದಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆದ ಘಟನೆ ಖಂಡನೀಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇದೊಂದು ಅಮಾನವೀಯ ಘಟನೆ. ಕಾಂಗ್ರೆಸ್ ಸರ್ಕಾರದ ವಿಕೃತ ಮಾನಸಿಕ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಪರೀಕ್ಷೆ ಬರೆಯಲು ಜನಿವಾರ ತೆಗೆದ ಪ್ರಕರಣ ಈ ಹಿಂದೆ ನಡೆದ ಉದಾಹರಣೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಇಂತಹ ಅಹಿತಕರ ಘಟನೆ ನಡೆದಿದೆ.
ಭವಿಷ್ಯದ ಕನಸು ಕಟ್ಟಿಕೊಂಡು ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಉಡುಗಿಸುವ ಕೆಲಸ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ವಂಚಿತ ವಿದ್ಯಾರ್ಥಿಯ ಶಿಕ್ಷಣ ಮುಂದುವರಿಕೆಗೆ ಯಾವುದೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು.
ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ರೂಪಾಲಿ ಎಸ್.ನಾಯ್ಕ ಆಗ್ರಹಿಸಿದ್ದಾರೆ.