ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭವಾಗಲಿದ್ದು, ಆಯ್ಕೆಯಾದ ಅಭ್ಯರ್ಥಿ ಭಾರತದ 15ನೇ ರಾಷ್ಟ್ರಪತಿಯಾಗ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಆಡಳಿತದಲ್ಲಿರುವ ಬಿಜೆಪಿಯ ಸಂಖ್ಯಾಬಲ ಹೆಚ್ಚಿದ್ದು ಮುರ್ಮುಅವರ ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದೆ. ಜಾರ್ಖಂಡ್ನ ಮಾಜಿ ಗವರ್ನರ್ ಆಗಿರುವ ದ್ರೌಪದಿ ಮುರ್ಮು ಅವರು ಆಯ್ಕೆಯಾದರೆ, ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿ ಮತ್ತು ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಲಿದ್ದಾರೆ.
ಜುಲೈ 18 ರಂದು ದೇಶಾದ್ಯಂತ ಎಲ್ಲಾ ಚುನಾಯಿತ ಶಾಸಕರು ಮತ್ತು ಸಂಸದರು ರಾಮ್ ನಾಥ್ ಕೋವಿಂದ್ ಅವರ ಉತ್ತರಾಧಿಕಾರಿಗೆ ಮತ ಹಾಕಿದ್ದರು. ಸಂಸತ್ ಭವನದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ 736 ಮತದಾರರಲ್ಲಿ 728 ಮತದಾರರು ಮತ ಚಲಾಯಿಸಿದ್ದಾರೆ. ಸಂಸತ್ ಭವನದಲ್ಲಿ ಒಟ್ಟು ಶೇ.98.91 ಮತದಾನವಾಗಿದೆ.