ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಕೋವಿಡ್ ಉಪತಳಿ 79 ವರ್ಷದ ಒಬ್ಬರಲ್ಲಿ ಮಾತ್ರ ಈವರೆಗೂ ಪತ್ತೆಯಾಗಿದೆ. ಆದರೆ ಸಿಂಗಪುರಕ್ಕೆ ತೆರಳಿದವರಲ್ಲಿ ಭಾರತದ ಇತರ ಪ್ರದೇಶದವರೂ ಇದ್ದರು. ಹೀಗಾಗಿ ಹೊಸ ತಳಿಯ ಕೋವಿಡ್ ಸೋಂಕು ಕೇರಳ ಮಾತ್ರವಲ್ಲ, ಇತರ ರಾಜ್ಯಗಳಲ್ಲೂ ಇರುವುದು ಸ್ಪಷ್ಟ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಇಲಾಖೆಯು ಕೈಗೊಂಡಿರುವ ವ್ಯಾಪಕ ತಪಾಸಣೆ, ಮುನ್ನೆಚ್ಚರಿಕೆಯಿಂದಾಗಿ ಒಂದು ಪ್ರಕರಣ ಪತ್ತೆಯಾಗಿದೆ. ಎಲ್ಲೆಡೆ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಸೋಂಕು ಹರಡದಂತೆ ಎಚ್ಚರ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ಅಸಮರ್ಥ ಎಂದು ವಿಧಾನಸಭೆ ಅಧಿವೇಶನದಲ್ಲಿ ಆರೋಪಿಸಿದ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಟೀಕೆಗೆ ಪ್ರತಿಕ್ರಿಯಿಸಿದ ಸಚಿವೆ, ಕೆಲ ಜನರು ಆನಗತ್ಯ ಜನರಲ್ಲಿ ಭಯ ಮೂಡಿಸುತ್ತಿದ್ದಾರೆ. ಇದು ಸರಿಯಲ್ಲ. ಕೋವಿಡ್ ಸೋಂಕಿತರ ಸಂಖ್ಯೆ ಕಳೆದ ನವೆಂಬರ್ನಲ್ಲಿ ಹೆಚ್ಚಾಗಿದ್ದನ್ನು ಗಮನಿಸಿದ ರಾಜ್ಯ ಸರ್ಕಾರ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸೋಂಕಿತರಿಂದ ಸಂಗ್ರಹಿಸಿದ ಮಾದರಿಯನ್ನು ಕಳುಹಿಸಲು ಆರಂಭದಲ್ಲೇ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು ಎಂದು ಹೇಳಿದ್ದಾರೆ.