March 26, 2026
Thursday, March 26, 2026
spot_img

ಗೋ ಸಾಗಾಟದ ವಾಹನ ಪಲ್ಟಿ; ಮೂರು ಗೋವುಗಳಿಗೆ ಗಾಯ, ಆರೋಪಿಗಳು ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿರುವ ಕಾಗಡಿಕಟ್ಟೆ ಬಳಿ ಇಂದು ಬೆಳಗ್ಗಿನ ಜಾವ ಸುಮಾರು 2:30 ಗಂಟೆಗೆ ನಡೆದ ಘಟನೆಯಲ್ಲಿ, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಶೋಕ್ ಲೈಲ್ಯಾಂಡ್ ಮಾದರಿಯ ಈ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂ ಆಗಿ, ಅದರೊಳಗಿದ್ದ ಮೂರು ಗೋವುಗಳು ಗಾಯಗೊಂಡಿವೆ.

ಘಟನೆಯ ನಂತರ ಬೆಳಕಿಗೆ ಬಂದಿರುವ ಗಂಭೀರ ಸಂಗತಿ ಎಂದರೆ, ವಾಹನದಲ್ಲಿದ್ದ ಮತ್ತು ಗಾಯಗೊಂಡಿದ್ದ ಇಬ್ಬರು ಆರೋಪಿಗಳನ್ನು ಅವರ ಸಹಚರರು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಇನ್ನೋವಾ ಕಾರಿನಲ್ಲಿ ಬೇರೆಡೆಗೆ ಸಾಗಿಸಿದ್ದಾರೆ. ಈ ಮೂಲಕ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರು ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಗೋಹತ್ಯೆ ಜಾಲದ ಶಂಕೆ, ಪೊಲೀಸರ ಕಠಿಣ ಕ್ರಮ:

ಈ ಅಪಘಾತದ ಮೂಲಕ ಕೊಡಗು ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ ಮತ್ತು ಗೋಹತ್ಯೆ ಚಟುವಟಿಕೆಗಳು ನಡೆಯುತ್ತಿರುವುದು ಪುನಃ ಬಯಲಾಗಿದೆ. ಹಾಗಾಗಿ, ಈ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಪೊಲೀಸರು ತಪ್ಪಿಸಿಕೊಂಡಿರುವ ಆರೋಪಿಗಳ ಪತ್ತೆಗೆ ಹಾಗೂ ಈ ಅಕ್ರಮ ಜಾಲದ ಬೇರುಗಳನ್ನು ಭೇದಿಸಲು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದೇ ವೇಳೆ, ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹಿಂದು ಜಾಗರಣ ವೇದಿಕೆ ಮುಖಂಡ ಬೋಜೆಗೌಡ ಅವರು, “ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್‌ ಇಲಾಖೆಯು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯಬಾರದು,” ಎಂದು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಉಗ್ರ ಪ್ರತಿಭಟನೆ ನಡೆಸುವುದಾಗಿ ಅವರು ಸವಾಲು ಹಾಕಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !