ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ದುರುಳರ ಕೃತ್ಯ ಅತ್ಯಂತ ಅಮಾನವೀಯವಾಗಿದ್ದು, ಈ ಹೀನ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಗೋಮಾತೆಯನ್ನು ತಾಯಿಯಂತೆ ಪೂಜಿಸುವ ನಮಗೆಲ್ಲ ಈ ಕೃತ್ಯ ಅತ್ಯಂತ ಘಾಸಿಯುಂಟು ಮಾಡಿದೆ. ಇಂತಹ ಅಮಾನವೀಯ ಕೆಲಸ ಮಾಡಿರುವ ಪುಂಡರಿಗೆ ಈ ಸರ್ಕಾರದಲ್ಲಿ ಯಾವುದೇ ಭಯ ಇಲ್ಲದಂತೆ ಕಾಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಗೋವುಗಳಿಗೆ ಸರಿಯಾದ ರಕ್ಷಣೆ ನೀಡದಿರುವುದು, ಗೋಶಾಲೆಗಳಿಗೆ ಸರಿಯಾದ ಅನುದಾನ ನೀಡದೇ ನಿರ್ಲಕ್ಣ್ಯ ಮಾಡಿರುವುದರ ಪರಿಣಾಮ ಇಂತಹ ಹೃದಯಹೀನ ಕೃತ್ಯಗಳು ನಡೆಯಲು ಪ್ರೇರಣೆ ನೀಡಿದಂತಾಗಿದೆ. ಈ ಸರ್ಕಾರಕ್ಕೆ ಗೋಮಾತೆಯ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ಇಂತಹ ಹೇಯ ಕೃತ್ಯ ಮಾಡಿರುವ ಪುಂಡರನ್ನು ಪತ್ತೆ ಹಚ್ಚಿ ತಕ್ಷಣ ಬಂಧಿಸಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.