ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ಬೆಳಗ್ಗೆಯೇ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ ಸಂಭವಿಸಿರುವ ತಮಿಳುನಾಡಿನಲ್ಲಿ ನಡೆದಿದೆ. ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು ಆಂಬ್ಯುಲೆನ್ಸ್ ಸಹಾಯದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದುತ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಆಗಲೇ ಬೆಂಕಿ ಹೊತ್ತಿಕೊಂಡಿದ್ದರಿಂದ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಳಯಪೇಟೆಯಲ್ಲಿರುವ ಗೋದಾಮು ವಸತಿ ಸಮುಚ್ಚಯದ ಮಧ್ಯದಲ್ಲಿದ್ದ ಕಾರಣ, ಸ್ಫೋಟದ ರಭಸಕ್ಕೆ ಮೂರು ಮನೆಗಳು ಕುಸಿದಿವೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಮತ್ತು ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಮತ್ತೊಂದೆಡೆ ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪ್ರಸ್ತುತ ಅವಶೇಷಗಳನ್ನು ತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಈ ಘಟನೆಯಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ದುರಂತಕ್ಕೆ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.