ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳ: ಆರ್.ಅಶೋಕ್ ಆರೋಪ

ಹೊಸ ದಿಗಂತ ವರದಿ, ಹಾಸನ:

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಿದ್ದು ಮೈಕ್ರೋಫೈನಾನ್ಸ್ ಹಾವಳಿ ತಡೆಗಟ್ಟಲು ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ದೂರಿದರು.

ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೊಫೈನಾನ್ಸ್ ಕಂಪೆನಿಗಳ ಕಿರುಕುಳದಿಂದ ಮೂವತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ, ಸುಗ್ರೀವಾಜ್ಞೆ ತಂದು ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸುವ ಭರವಸೆ ನೀಡಿರುವ ಸರ್ಕಾರ ಕಂಪೆನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಲ್ಲಿ ವಿಫಲವಾಗಿದೆ ಎಂದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳದ ಬಗ್ಗೆ ಅನೇಕ ಪ್ರಕರಣಗಳು ದಾಖಲಾದರೂ ಈ ವರೆಗೆ ಒಂದೇ ಒಂದು ಕಂಪನಿಯ ಬಗ್ಗೆ ಸರ್ಕಾರ ಕ್ರಮಕ್ಕೆ ಮುಂದಾಗಿಲ್ಲ, ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳನ್ನು ಮುಟ್ಟುಗೋಲು ಹಾಕಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ದಿ ನಿಗಮ, ಡಿ. ದೇವರಾಜ್ ಅರಸ್ ಅಬಿವೃದ್ಧಿ ನಿಗಮ, ವೀರಶೈವ ಅಭಿವೃದ್ದಿ ನಿಗಮ ಸೇರಿದಂತೆ ವಿವಿಧ ನಿಗಮಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿತ್ತು, ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ನಿಗಮಗಳ ಅನುದಾನ ಕಡಿತಗೊಳಿಸಿದೆ ಜನರು ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಪಡೆಯಲು ಇದು ಒಂದು ಪ್ರಮುಖ ಕಾರಣವಾಗಿದೆ ಎಂದರು.

ಅಭಿವೃದ್ದಿ ನಿಗಮಗಳಿಗೆ ಹೆಚ್ಚಿನ ಅನುದಾನ ನೀಡಿ ಫಲಾನುಭವಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದಲ್ಲಿ ಬಡವರು ಬದುಕು ಕಟ್ಟಿಕೊಳ್ಳಲು ಅನುಕೂಲವಾಗಲಿದೆ, ಅಲ್ಲದೆ ಇದರಿಂದ ಮೈಕ್ರೋ ಫೈನಾನ್ಸ್ ಹಾವಳಿಯನ್ನು ತಡೆಗಟ್ಟಬಹುದಾಗಿದೆ. ಆದರೆ ಅನುದಾನವನ್ನು ಹೆಚ್ಚಿಸಬೇಕಿರುವ ಕಾಂಗ್ರೆಸ್ ಅದರಲ್ಲೂ ಕಡಿಮೆ ಮಾಡಿ ಬಡವರನ್ನು ಸಾಲದ ಹೊರೆ ಹೆಚ್ಚಿಸಿತ್ತಿದೆ. ಇದಲ್ಲದೆ ಬಾಣಂತಿಯರ ಸರಣಿ ಸಾವು ಹೆಚ್ಚಾಗಿವೆ, ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಸಾವುಗಳು ಹೆಚ್ಚಾಗಿವೆ ಇದು ಕಾಂಗ್ರೆಸ್ ನ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಇದಲ್ಲದೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಮತ್ತು ಬ್ಯಾಂಕ್ ದರೋಡೆ, ಎಟಿಎಂ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು ಕಳ್ಳರಿಗೆ, ಅತ್ಯಾಚಾರಿಗಳಿಗೆ ಪೊಲೀಸರ ಭಯ ಇಲ್ಲದಂತೆ ಆಗಿದೆ, ಕಾನೂನು ಸುವ್ಯವಸ್ಥೆ ಬಲಪಡಿಸುವ ಅಗತ್ಯವಿದೆ. ಈ ಎಲ್ಲಾ ಪ್ರಕರಣಗಳನ್ನು ನಿಯಂತ್ರಿಸಲು ಹೊಸ ಕಾನೂನುಗಳ ಅಗತ್ಯ ಇಲ್ಲ ಈಗಾಗಲೇ ಇರುವ ಕಾನೂನುಗಳನ್ನೇ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಶಾಸಕ ಸಿಮೆಂಟ್ ಮಂಜುನಾಥ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಇದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!