ಕಲಬುರಗಿಯಲ್ಲಿ ಕೇಂದ್ರ ಅಧ್ಯಯನ ತಂಡದಿಂದ ಬೆಳೆ ಹಾನಿ ಪರಿಶೀಲನೆ

ಹೊಸದಿಗಂತ ವರದಿ ಕಲಬುರಗಿ:

ಕೇಂದ್ರದ ಕೃಷಿ ಹಾಗೂ ರೈತ ಕಲ್ಯಾಣ ಸಚಿವಾಲಯದ ನಿರ್ದೇಶಕ ಡಾ.ಕೆ.ಮನೋಹರನ‌ ನೇತೃತ್ವದ ಆಂತರಿಕ‌ ಸಚಿವಾಲಯದ ತ್ರಿಸದಸ್ಯ ತಂಡ ಗುರುವಾರ ಜಿಲ್ಲೆಯ ಕಲಬುರಗಿ ತಾಲೂಕಿನ ಹೊನ್ನಕಿರಣಗಿ, ಜೇವರ್ಗಿ ಪಟ್ಟಣಕ್ಕೆ ಭೇಟಿ ನೀಡಿ ಬೆಳೆ ಹಾನಿ, ಮಳೆಯಿಂದ ಬಿದ್ದ ಮನೆಗಳನ್ನು ವೀಕ್ಷಿಸಿದರು.

ಕಳೆದ‌ ಜುಲೈ-ಆಗಸ್ಟ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಸುರಿದ‌ ಮಳೆಯಿಂದ ಹಾಳಾದ‌ ಬೆಳೆ‌ಗಳ ವೀಕ್ಷಣೆಗೆ ತಂಡ ಆಗಮಿಸಿತ್ತು. ತಂಡದಲ್ಲಿ ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್.ಬಿ.ತಿವಾರಿ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಎಸ್.ಜಗದೀಶ ಜೊತೆಯಲ್ಲಿದ್ದರು.

ಆರಂಭದಲ್ಲಿ ಕಲಬುರಗಿ ತಾಲೂಕಿನ ಹೊನ್ನ‌ಕಿರಣಗಿಗೆ ಭೇಟಿ ನೀಡಿದ ತಂಡ ಗ್ರಾಮದ ರೈತ ಮಹಿಳೆ ರಸೂಲ್ ಬಿ. ಅವರ 1.30 ಎಕರೆ ಪ್ರದೇಶದಲ್ಲಿ ಬೆಳೆಯಲಾದ ತೊಗರಿ ಬೆಳೆ ವೀಕ್ಷಿಸಿದರು. ಸ್ಥಳದಲ್ಲಿದ್ದ ಕೃಷಿ ಅಧಿಕಾರಿಗಳಿಂದ ಗ್ರಾಮದಲ್ಲಿ ಬಿತ್ತನೆಯಾದ ಪ್ರದೇಶದಲ್ಲಿ ಹಾನಿಯ ಪ್ರಮಾಣದ‌ ಬಗ್ಗೆ ಮಾಹಿತಿ ಪಡೆದರು.

ಪ್ರಭಾರಿ ಜಂಟಿ ಕೃಷಿ ನಿರ್ದೇಶಕ ಸಮದ‌ ಪಟೇಲ್, ಸಹಾಯಕ ಕೃಷಿ‌ ನಿರ್ದೇಶಕ ಚಂದ್ರಕಾಂತ ಜೀವಣಗಿ ಅವರು ಮಾತನಾಡಿ, ಗ್ರಾಮದಲ್ಲಿ 3,291 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, ಹತ್ತಿ, ಕಡಲೆ ಬೆಳೆಯಲಾಗಿತ್ತು, ಇದರಲ್ಲಿ 680 ಹೆಕ್ಟೇರ್ ಪ್ರದೇಶ ಹಾಳಾಗಿದೆ. 350 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾದ ಹತ್ತಿಯಲ್ಲಿ 50 ಹೆಕ್ಟೇರ್ ಹಾನಿಯಾಗಿದೆ.
1,481 ರೈತರ‌ ಹೊಲಕ್ಕೆ ನೀರು ಹೊಕ್ಕು ಬೆಳೆ‌ ನಾಶವಾಗಿದೆ. ಇಲ್ಲಿ ರೈತರು ಎರಡ್ಮೂರು ಬಾರಿ ಬಿತ್ತನೆ ಮಾಡಿದ್ದಾರೆ. ಪ್ರತಿ ಬಾರಿ ಬಿತ್ತನೆಗೆ ಪ್ರತಿ ಎಕರೆಗೆ 4-5 ಸಾವಿರ ರೂ. ವ್ಯಯ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!