Friday, December 8, 2023

Latest Posts

ಬೆಳೆ ಹಾನಿ: ಸ್ಥಳ ಪರಿಶೀಲಿಸಿ ರೈತರಿಗೆ ಧೈರ್ಯ ಹೇಳಿದ ಸಚಿವ ಎನ್. ಚಲುವರಾಯಸ್ವಾಮಿ

ಹೊಸದಿಗಂತ ವರದಿ ಮಂಡ್ಯ:

ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳಕ್ಕೆ ಹಾನಿ ಉಂಟಾಗಿದ್ದು,  ಸ್ಥಳಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ನಂತರ ಮಾತನಾಡಿದ ಅವರು ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದೆ ಎಂದರು.

ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುವುದು ತಡವಾದರೆ, ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ ಎಂದು ಹೇಳಿದರು.

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುತ್ತೇವೆ‌ ಎಂದು ತಿಳಿಸಿದರು.

ಕೇಂದ್ರದ ತಂಡವು ಬೆಳೆ ಸಮಿಕ್ಷೆ ನಡೆಸಿ ವರದಿ ಸಲ್ಲಿಸಿದೆ. ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತದೆ. ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!