ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಾಂಸ್ಕೃತಿಕ ಕೊಡುಗೆ ಅಪಾರ : ಡಾ.ಮನು ಬಳಿಗಾರ

ಹೊಸದಿಗಂತ ವರದಿ ಕಲಬುರಗಿ :

ಕಲ್ಯಾಣ ಕರ್ನಾಟಕ ಹಿಂದುಳಿದ ಭಾಗ ಎಂಬ ಮಾತು ಈಗ ಸವಕಳಿಯಾಗಿದ್ದು, ಈಗ ಈ ಭಾಗ ಸಾಕಷ್ಟು ಮುಂದುವರಿದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.‌ ಮನು ಬಳಿಗಾರ ಅಭಿಪ್ರಾಯಪಟ್ಟರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಶುಕ್ರವಾರದಿಂದ ಆರಂಭವಾಗಿರುವ ಕಲ್ಯಾಣ ಕರ್ನಾಟಕ ಉತ್ಸವ-2023 ಅಂಗವಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಲ್ಯಾಣ ದರ್ಶನ (ಕಲ್ಯಾಣ ಕರ್ನಾಟಕ ಕಲೆ, ಸಾಹಿತ್ಯ ಸಮಾಜೋ ಸಾಂಸ್ಕೃತಿಕ ದರ್ಶನ) ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಆಶಯ ಭಾಷಣ ಮಾಡಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಎರಡು ವರ್ಷಕ್ಕೊಮ್ಮೆ ಇಂತಹ ಉತ್ಸವಗಳು ನಡೆಸುವ ಮೂಲಕ ಅಭಿವೃದ್ಧಿ, ಅಪಸ್ವರ ದೂರ ಮಾಡಲು ಪ್ರಯತ್ನಿಸಬೇಕು. ಸಂಸ್ಕೃತಿ ಕುರಿತಾದ ಸಂಶೋಧನೆ, ಪರಿಷ್ಕರಣೆ ಮಾಡುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು.

ಈ ಭಾಗದಲ್ಲಿ ಏಮ್ಸ್ ಸ್ಥಾಪನೆಯಾಗವುದು ಬಹಳ ಅಗತ್ಯವಿದ್ದು, ಕೃಷಿ, ಆಡಳಿತ, ನೀರಾವರಿ, ಮೂಲ ಸೌಕರ್ಯ ಒದಗಿಸುವ ಅಭಿವೃದ್ಧಿ ಕಾರ್ಯಗಳನ್ನು ರೂಪಿಸುವುದು ಮತ್ತು ಅನುಷ್ಠಾನಕ್ಕೆ ತರುವುದು ಬಹಳ ಅಗತ್ಯ ಎಂದು ತಿಳಿಸಿದರು.

ಈ ಭಾಗದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಕಂಡಾಗ ಮಾತ್ರ ಈ ಭಾಗದ ಆರ್ಥಿಕ ಪರಿಸ್ಥಿತಿ ಕೂಡ ಸುಧಾರಿಸಲಿದೆ. ಅಭಿವೃದ್ಧಿ ದೃಷ್ಟಿಯಿಂದ ಹೈ.ಕ. ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾಯಿಸಿರುವುದು ಕೂಡ ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!