ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ಎಲ್ಪಿಜಿ ದರ ಏರಿಕೆ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದು, ಇದು ಬಡ ಮತ್ತು ಮಧ್ಯಮ ವರ್ಗದವರ ಪಾಲಿಗೆ ಭರಿಸಲಾಗದ ಹೊರೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಈಗಾಗಲೇ ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನ ಸಾಮಾನ್ಯರಿಗೆ, ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಸುಮಾರು 60 ರೂ. ಹೆಚ್ಚಿಸಿರುವುದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಬೆಲೆ ಏರಿಕೆ ಅನಿವಾರ್ಯವೇನಲ್ಲ. ಅಮೆರಿಕದ ಒತ್ತಡಕ್ಕೆ ಮಣಿದು ಭಾರತದ ವ್ಯೂಹಾತ್ಮಕ ಸ್ವಾತಂತ್ರ್ಯವನ್ನು ಬೇರೊಂದು ರಾಷ್ಟ್ರದ ಪಾದದಡಿ ಇರಿಸಲಾಗಿದೆ. ಮೋದಿಯವರ ದುರ್ಬಲ ವಿದೇಶಾಂಗ ನೀತಿಯೇ ಈ ಸಂಕಷ್ಟಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ.
ಪ್ರಧಾನಿಯವರು ವಿಶ್ವಮಟ್ಟದಲ್ಲಿ ಭಾರತದ ಮಾನ ಕಳೆಯುತ್ತಿದ್ದಾರೆ. ಶರಣಾಗತಿಯನ್ನೇ ದೇಶದ ಕಾರ್ಯತಂತ್ರ ಎಂದು ಮೋದಿ ಸರ್ಕಾರ ತಪ್ಪಾಗಿ ಭಾವಿಸಿದೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.



