ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಸಂಖ್ಯಾಬಲದ ಲೆಕ್ಕಾಚಾರಕ್ಕೆ ಈಗ ತೆರೆ ಬಿದ್ದಿದೆ.
ಬಹುಮತದ ಬೆಂಬಲವನ್ನು ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾದ ಟಿವಿಕೆ ನಾಯಕ ಜೋಸೆಫ್ ವಿಜಯ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ದಾರಿ ಮಾಡಿಕೊಟ್ಟಿದೆ.
ವಿಧಾನಸಭೆ ಚುನಾವಣೆಯಲ್ಲಿ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಳಿಕ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಲೆಕ್ಕಾಚಾರ ಜೋರಾಗಿತ್ತು. ಬಳಿಕ ಕಾಂಗ್ರೆಸ್ ಸೇರಿದಂತೆ ಕೆಲ ಮೈತ್ರಿ ಪಕ್ಷಗಳು ಬೆಂಬಲ ಘೋಷಿಸಿದ ಪರಿಣಾಮ ವಿಜಯ್ ಶಕ್ತಿ ಹೆಚ್ಚಿತು. ಒಟ್ಟು 121 ಶಾಸಕರ ಬೆಂಬಲದೊಂದಿಗೆ ಅವರು ಬಹುಮತದ ಗಡಿ ದಾಟಿದ್ದಾರೆ.
ಇದನ್ನೂ ಓದಿ:
ಈ ಹಿನ್ನೆಲೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್, ಬೆಂಬಲ ಪತ್ರಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ಅಧಿಕೃತವಾಗಿ ಹಕ್ಕು ಮಂಡಿಸಿದರು. ಪರಿಶೀಲನೆ ಬಳಿಕ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇದರಿಂದ ನಾಳೆ ಬೆಳಗ್ಗೆ 11 ಗಂಟೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಹೊಸ ಸರ್ಕಾರದ ಪದಗ್ರಹಣಕ್ಕೆ ಭಾರೀ ಸಿದ್ಧತೆಗಳು ಆರಂಭವಾಗಿದ್ದು, ರಾಜಕೀಯ ಹಾಗೂ ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ. ವಿಜಯ್ ರಾಜಕೀಯ ಪಯಣದಲ್ಲಿ ಇದು ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದಂತಾಗಿದೆ.



