ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.
ಜೈಲಿನಲ್ಲಿರುವ ದರ್ಶನ್ಗೆ ಅಗತ್ಯ ಮೂಲಸೌಕರ್ಯ ಮತ್ತು ಸೂಕ್ತ ಸೌಲಭ್ಯಗಳನ್ನು ಒದಗಿಸಲಾಗಿದೆಯೇ ಎಂಬ ಬಗ್ಗೆ ರಾಜ್ಯ ಸರ್ಕಾರದಿಂದ ವಿವರವಾದ ವರದಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ.
ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಿ, ಒಂದು ವಾರದೊಳಗೆ ಸರ್ಕಾರ ಸ್ಪಷ್ಟನೆ ನೀಡುವಂತೆ ಆದೇಶಿಸಿದೆ. ಜೊತೆಗೆ, ಪ್ರಕರಣದ ಸಾಕ್ಷಿಗಳ ವಿಚಾರಣೆ ಯಾವ ಹಂತದಲ್ಲಿದೆ ಮತ್ತು ಉಳಿದ ಪ್ರಕ್ರಿಯೆ ಪೂರ್ಣಗೊಳ್ಳಲು ಎಷ್ಟು ಸಮಯ ಬೇಕಾಗಬಹುದು ಎಂಬ ಮಾಹಿತಿ ನೀಡುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೂ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:
ದರ್ಶನ್ ಪರ ಹಿರಿಯ ವಕೀಲರು, ಜೈಲಿನಲ್ಲಿ ಅವರಿಗೆ ಸಮರ್ಪಕ ಸೌಲಭ್ಯ ಸಿಗುತ್ತಿಲ್ಲ ಎಂದು ವಾದ ಮಂಡಿಸಿದರು. ಬೆಳಕಿನ ವ್ಯವಸ್ಥೆಯಿಲ್ಲದ ಕೊಠಡಿಯಲ್ಲಿ ಇರಿಸಲಾಗಿದೆ ಎಂಬ ಅಂಶವನ್ನೂ ನ್ಯಾಯಾಲಯದ ಗಮನಕ್ಕೆ ತಂದರು. ಈ ಹಿನ್ನೆಲೆ, ಜೈಲು ಪರಿಸ್ಥಿತಿ ಮತ್ತು ವಿಚಾರಣೆಯ ಪ್ರಗತಿ ಕುರಿತ ವರದಿ ಆಧರಿಸಿ ಮುಂದಿನ ಹಂತದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.



