ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಚಿಕ್ಕಮಗಳೂರಿನಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ದತ್ತಮಾಲಾ ಅಭಿಯಾನ ನಡೆಯಲಿದೆ. ಮಾಲೆ ಧರಿಸಿದ ಕಾರ್ಯಕರ್ತರು ಬಾಬಾಬುಡನ್ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನೀಡಲಿದ್ದು, ಈ ಅಭಿಯಾನದ ಅಂಗವಾಗಿ ಕಾನೂನು-ಸುವ್ಯಸ್ಥೆ ಕಾಪಾಡಿಕೊಳ್ಳಲು ಜಿಲ್ಲೆಯಾದ್ಯಂತ 49 ಮಂದಿ ಸೆಕ್ಟರ್ ಮ್ಯಾಜಿಸ್ಟ್ರೇಟರುಗಳನ್ನು ನೇಮಕ ಮಾಡಲಾಗಿದೆ.
ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಧಿಕಾರಿಗಳಾದ ಸಿ.ಎನ್.ಮೀನಾ ನಾಗಾರಾಜ್ ಆದೇಶ ಹೊರಡಿಸಿದ್ದರು. ಜಿಲ್ಲೆಯಾದ್ಯಂತ ಒಟ್ಟು 26 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆದು ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವ ಹಾಗೂ ನಿರ್ಗಮಿಸುವ ಪ್ರಯಾಣಿಕರು ಹಾಗೂ ದತ್ತ ಮಾಲಾಧಾರಿಗಳ ವಾಹನಗಳ ಮೇಲೆ ನಿಗಾ ವಹಿಸಲಾಗಿದೆ.
ಬಂದೋಬಸ್ತ್ ಸಂಬಂಧ ಸಾಕಷ್ಟು ಪ್ರಮಾಣದಲ್ಲಿ ಹೆಚ್ಚುವರಿಯಾಗಿ ಪೊಲೀಸ್ ಅಧಿಕಾರಿ ಸಿಬ್ಬಂದಿಯವರನ್ನು ನೇಮಿಸಿದ್ದು ಜೊತೆಗೆ ಕೆಎಸ್ಆರ್ಪಿ ಹಾಗೂ ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದನ್ವಯ ವಾಹನಗಳ sMcAr ನಿರ್ಬಂಧಿಸಲಾಗಿದ್ದು, ನಗರದಲ್ಲಿ ಶೋಭಾ ಯಾತ್ರೆ ನಡೆಯುವ ನವೆಂಬರ್ 5 ರಂದು ಬೆಳಗ್ಗೆ 6 ರಿಂದ ಸಂಜೆ 5ರವರೆಗೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಸಾಗುವ ವಾಹನಗಳು ರತ್ನಗಿರಿ ರಸ್ತೆಯಲ್ಲಿ ಸಂಚರಿಸಬೇಕಾಗುತ್ತದೆ. ಎಂಜಿ ರಸ್ತೆಯಲ್ಲಿ ಸಂಚರಿಸಬೇಕಾದ ವಾಹನಗಳು ಮಾರ್ಕೆಟ್ ರಸ್ತೆ ಮತ್ತು ಐಜಿ ರಸ್ತೆಗಳಲ್ಲಿ ಸಂಚರಿಸಬೇಕಾಗುತ್ತದೆ.
ಚಿಕ್ಕಮಗಳೂರು ನಗರ, ದತ್ತಪೀಠ, ಸುತ್ತಮುತ್ತಲಿನ ಸೂಕ್ಷ್ಮ ಸ್ಥಳಗಳು ಹಾಗೂ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಜನರು ಹಾಗೂ ವಾಹನಗಳ ಚಲನ ವಲನಗಳ ಮೇಲೆ ನಿಗಾ ವಹಿಸಲಾಗಿದೆ. ಅಲ್ಲದೆ ಅಂತಹ ಸ್ಥಳಗಳಲ್ಲಿ ವಿಡಿಯೋ ಗ್ರಾಫರ್ ಗಳು ಮತ್ತು ಡ್ರೋನ್ ಕ್ಯಾಮೆರಾ ಗಳನ್ನು ಬಳಸಿ ಕಣ್ಗಾವಲು ಇರಿಸಲಾಗಿದೆ.
ನವೆಂಬರ್ 4 ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 6 ರ ಬೆಳಿಗ್ಗೆ 10 ಗಂಟೆಯವರೆಗೆ ಐಡಿ ಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಗಾಳಿಕೆರೆ ಹಾಗೂ ಮಾಣಿಕ್ಯದಾರ ಸ್ಥಳಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ.