ಹೊಸದಿಗಂತ ವರದಿ, ಬಳ್ಳಾರಿ:
ಜಿಲ್ಲೆಯಾದ್ಯಂತ ತಕ್ಷಣದಿಂದಲೇ ಮದುವೆ ಸಮಾರಂಭಗಳನ್ನು ಗರಿಷ್ಠ 50 ಜನರು ಮೀರದಂತೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆದು ಮಾಡತಕ್ಕದ್ದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್-19 ಸಮುಚಿತ ವರ್ತನೆಗಳನ್ನು ಮತ್ತು ಇತರೆ ಕೋವಿಡ್-19 ನಿಯಂತ್ರಣ ಸಂಬಂಧ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಈ ಆದೇಶ ಜ.31ರವರೆಗೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ರೀತಿಯ ರ್ಯಾಲಿಗಳು, ಧರಣಿಗಳು, ಮುಷ್ಕರಗಳು, ಇತರೆ ಎಲ್ಲ ತರಹದ ಸಭೆಗಳು/ ಸಮಾರಂಭಗಳು/ ಕಾರ್ಯಕ್ರಮಗಳು ಜ.31ರವರೆಗೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕೊವಿಡ್-19 ಸೊಂಕಿನ ಪರಿಸ್ಥಿತಿಯನ್ನು ಅವಲೋಕಿಸಿ ಸದ್ಯ ಹೊರಡಿಸಲಾಗಿರುವ ನಿರ್ದೇಶನಗಳ ಕುರಿತು ಅಗತ್ಯ ಆದೇಶಗಳನ್ನು ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳ ಉಲ್ಲಂಘನೆ ಕಂಡು ಬಂದಲ್ಲಿ ಅಂತಃ ಕಲ್ಯಾಣ ಮಂಟಪ ಮ್ಯಾನೆಜ್ ಮೆಂಟ್ ಮತ್ತು ಅಂತಹ ವ್ಯಕ್ತಿ/ವ್ಯಕ್ತಿಗಳ/ಸಂಘ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 ರಿಂದ 60ರ ಅನ್ವಯವಾಗುವ ಹಾಗೂ ಐ.ಪಿ.ಸಿ. ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020ರ ಕಲಂ (4), (5) ಮತ್ತು (10) ರಂತೆ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.