ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆಬ್ರವರಿ 25 ರಂದು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಲಿದ್ದು, ಭೇಟಿ ವೇಳೆ ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಉದಯಪುರದಲ್ಲಿ ಕೆಂದ್ರ ಜಲಶಕ್ತಿ ಸಚಿವಾಲಯ ನಡೆಸುತ್ತಿರುವ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಭಾಗಿಯಾಗಿದ್ದರು. ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ, ಈ ಹಿಂದೆ ಘೋಷಿಸಲಾಗಿರುವ ಅನುದಾನ ಹಾಗೂ ಮಹದಾಯಿ, ಮೇಕೆದಾಟು ಹಾಗೂ ಕೃಷ್ಮಾ ಮೇಲ್ದಂಡೆ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು. ಕೇಂದ್ರ ಸರ್ಕಾರದಿಂದ ಸಕಾರಾತ್ಮಕವಾಗಿ ಸ್ಪಂದನೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಉದಯಪುರದಲ್ಲಿ ನಡೆದ ನೀರಾವರಿ ಸಚಿವರ ಸಮ್ಮೇಳನವು ಎಲ್ಲ ರಾಜ್ಯಗಳ ಸಚಿವರನ್ನು ಒಗ್ಗೂಡಿಸಿದೆ. ಎಲ್ಲಾ ರಾಜ್ಯಗಳ ಅತ್ಯುತ್ತಮ ನೀರಾವರಿ ವ್ಯವಸ್ಥೆಗಳ ಪರಿಚಯವಾಗಿದೆ. ಇದರ ಜೊತೆಗೆ ನಮ್ಮಲ್ಲಿರುವ ಸಮಸ್ಯೆಗಳನ್ನು ಅರಿತು, ಅವುಗಳನ್ನು ಕೇಂದ್ರ ಜಲಶಕ್ತಿ ಸಚಿವಾಲಯದ ಮುಂದೆ ಇಡಬಹುದಾಗಿದೆ. ನೀರನ್ನು ಹೇಗೆ ಸಂರಕ್ಷಿಸಬೇಕು, ಮರುಬಳಕೆ ಮಾಡಬೇಕು. ಎಂಬುದು ಈ ಸಮ್ಮೇಳನದ ಉದ್ದೇಶವಾಗಿದೆ. ನಮ್ಮ ಯೋಜನೆಗಳನ್ನು ರಾಜಕೀಯ ಉದ್ದೇಶದಿಂದ ನೋಡಬೇಡಿ, ಸಮಸ್ಯೆಗಳನ್ನು ಬಗೆಹರಿಸಬೇಕು. ರಾಜ್ಯಗಳ ನಡುವಣ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ತಿಳಿಸಿದರು.