ಹೊಸದಿಗಂತ ವರದಿ ಹುಬ್ಬಳ್ಳಿ:
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸರ್ಕಾರ ನೀಡಬಾರದು ಎಂದು ಹೇಳಿಕೆ ನೀಡಿದಕ್ಕಾಗಿ ಕೂಡಲ ಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯ ಭಕ್ತರು ನನಗೂ ಹಾಗೂ ನನ್ನ ಆಪ್ತರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಕಾಯಕ ಸಮಾಜದಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ. ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟವು ಅತಿ ಹಿಂದೂಳಿದ ವರ್ಗಗಳ ಜನರ ಧ್ವನಿಯಾಗಿ, ಜನರ ಅಭಿವೃದ್ಧಿಗಿರುವ ಮೀಸಲಾತಿ ಸಂರಕ್ಷಣೆಗಾಗಿ ರಾಜ್ಯ ವ್ಯಾಪಿ ಹೋರಾಟ ಮಾಡಲಾಗುತ್ತಿದೆ. ಇದು ಯಾವುದೇ ಸಮಾಜದ ವಿರುದ್ಧವಲ್ಲ. ಆದರೆ ಕೂಡಲ ಸಂಗಮ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ ಭಕ್ತರು ನಮ್ಮ ಮೇಲೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದರು.
ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಕಾಯಕ ಸಮಾಜಕ್ಕಿರುವ ಶೇ.15 ರಷ್ಟು ಮೀಸಲಾತಿ ಉಳಿವಿಗಾಗಿ ಮಾತನಾಡಿದ್ದೇನೆ. ಅಂದು ನಾನು ಆಡಿದ ಮಾತುಗಳು ಪಂಚಮಸಾಲಿ ಜನಾಂಗದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆ ಸಮಾಜದ ಧುರೀಣರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಹಿಂದೂಳಿದ ಸಮಾಜಗಳ ಜನರು. ನಮ್ಮ ಮೇಲೆ ತೋಳ್ಬಲ ಪ್ರದರ್ಶಿಸುತ್ತಿದ್ದಾರೆ ಎಂದರು.
ಪಂಚಮಸಾಲಿ ಸಮಾಜದ ಮೃತ್ಯುಂಜಯ ಸ್ವಾಮೀಜಿ ಹಾಗೂ ಅವರ ಭಕ್ತರ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾನು ಬಹಿರಂಗ ಕ್ಷಮೆಯಾಚಿಸುವುದಾಗಿಯೂ ಹೇಳಿದರು.