ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ಅಪಘಾತದಲ್ಲಿ ಮೃತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ.
ನಿನ್ನೆಯಿಂದಲೇ ಜಾರಿಯಲ್ಲಿದ್ದ ರಕ್ಷಣಾ ಕಾರ್ಯಾಚರಣೆ ಇದೀಗ ಮುಕ್ತಾಯವಾಗಿದ್ದು, ಒಟ್ಟು 1,150 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ನಡೆದ ಕಾರ್ಯಾಚರಣೆ ವೇಳೆ 250 ಮಂದಿ ಗಾಯಗೊಂಡ ಪ್ರಯಾಣಿಕರು ದೊರಕಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇಶದಲ್ಲೇ ಅತ್ಯಂತ ಭೀಕರ ರೈಲು ಅಪಘಾತ ಇದಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದು, ಮಾಹಿತಿ ಪಡೆದಿದ್ದಾರೆ. ರೈಲ್ವೆ ದುರಂತ ಭೀಕರವಾಗಿದೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳಿಗೂ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮೃತರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆಯಾಗಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತನಿಖೆಗಾಗಿ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ಮೊದಲ ಆದ್ಯತೆ ನೀಡಲಾಗುವುದು. ರೈಲು ಸುರಕ್ಷತಾ ಆಯುಕ್ತರಿಂದ ಸ್ವತಂತ್ರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.