ಹೊಸದಿಗಂತ, ದಾವಣಗೆರೆ:
ಸಾಲದ ಬಾಧೆಯಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವ ರೈತನೊಬ್ಬ ಶನಿವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಿಲ್ಲೆಯ ಚನ್ನಗಿರಿ ತಾಲೂಕು ನವಿಲೇಹಾಳು ಗ್ರಾಮದ ನಾರಪ್ಪ (32) ಆತ್ಮಹತ್ಯೆ ಮಾಡಿಕೊಂಡ ರೈತ. ಸಾಲ ಬಾಧೆಯಿಂದ ನೊಂದಿದ್ದ ರೈತ ನಾರಪ್ಪ ಮಳೆ ಇಲ್ಲದೇ ಬೆಳೆಗಳು ಒಣಗಿದ್ದರಿಂದ ಮನನೊಂದು ಶುಕ್ರವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು.
ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಲಾಯಿತಾದರೂ, ತೀವ್ರ ಅಸ್ವಸ್ಥಗೊಂಡಿದ್ದ ರೈತ ನಾರಪ್ಪ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಾವನ್ನಪ್ಪಿದ್ದಾರೆ. ಕೃಷಿಗಾಗಿ ಮೃತ ನಾರಪ್ಪ ಬ್ಯಾಂಕ್, ಕೈಗಡ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.