ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ದೋಷಿ ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಸೂರತ್ ಸೆಷನ್ಸ್ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ.
ಈ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಏಪ್ರಿಲ್ 20ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.
ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಚೀಮಾ,ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಯನ್ನು ಕೂಲಂಕಷವಾಗಿ ಪರಿಶೀಲಿಸಬೇಕಿದೆ. ಅವರು ಆಡಿದ ಮಾತುಗಳನ್ನು ಬೇರೆ ಅರ್ಥದಲ್ಲಿ ಬಿಂಬಿಸಲಾಗಿದೆ. ನರೇಂದ್ರ ಮೋದಿ ಅವರನ್ನು ಟೀಕಿಸಿದ್ದನ್ನೇ ಮಾನಹಾನಿ ರೀತಿ ಬಿಂಬಿಸಲಾಗಿದೆ. ಹಾಗಾಗಿ, ಸೂರತ್ ನ್ಯಾಯಾಲಯದ ತೀರ್ಪಿನ ಮರುಪರಿಶೀಲನೆ ಅಗತ್ಯವಿದೆ ಎಂದರು. ಬಳಿಕ ನ್ಯಾಯಾಲಯವು ತೀರ್ಪು ಕಾಯ್ದಿರಿಸಿತು.
ಮೋದಿ ಉಪನಾಮ ಹೊಂದಿರುವವರೆಲ್ಲ ಏಕೆ ಕಳ್ಳರು ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ ಬಳಿಕ ಮಾನಹಾನಿ ಕೇಸ್ ದಾಖಲಾಗಿದ್ದು, ಮಾರ್ಚ್ 23ರಂದು ಸೂರತ್ ನ್ಯಾಯಾಲಯವು ಕಾಂಗ್ರೆಸ್ ನಾಯಕನನ್ನು ದೋಷಿ ಎಂದು ತೀರ್ಪು ನೀಡಿದೆ. ಹಾಗೆಯೇ, ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರಿಂದಾಗಿ ರಾಹುಲ್ ಗಾಂಧಿ ಅವರು ಲೋಕಸಭೆಯಿಂದ ಅನರ್ಹರಾಗಿದ್ದಾರೆ.