ಹೊಸದಿಗಂತ ಡಿಜಿಟಲ್ ಡೆಸ್ಕ್:
ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ 10ಪ್ರತಿಶತವನ್ನು ಅಗ್ನಿವೀರರಿಗೆ ಮೀಸಲಿಡುವ ನಿರ್ಧಾರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ.
ಅಗ್ನಿಪಥ ಯೋಜನೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಎಲ್ಲಾ ಸೇನಾಮುಖ್ಯಸ್ಥರೊಂದಿಗೆ ಹಾಗೂ ರಕ್ಷಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಕ್ಷಣಾ ಸಚಿವಾಲಯವು ಭಾರತೀಯ ಕೋಸ್ಟ್ ಗಾರ್ಡ್ ಮತ್ತು ರಕ್ಷಣಾ ನಾಗರಿಕ ಹುದ್ದೆಗಳಲ್ಲಿ ಮತ್ತು ಎಲ್ಲಾ 16 ರಕ್ಷಣಾ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ 10 ಪ್ರತಿಶತ ಮೀಸಲಾತಿಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದೆ. ಈ ಮೀಸಲಾತಿಯು ಮಾಜಿ ಸೈನಿಕರಿಗೆ ಅಸ್ತಿತ್ವದಲ್ಲಿರುವ ಮೀಸಲಾತಿಗೆ ಹೆಚ್ಚುವರಿಯಾಗಿರುತ್ತದೆ ಎಂದು ಹೇಳಿದೆ.
“ಈ ನಿಬಂಧನೆಗಳನ್ನು ಜಾರಿಗೆ ತರಲು ಸಂಬಂಧಿತ ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು. ರಕ್ಷಣಾ ಸಾರ್ವಜನಿಕ ವಲಯದ ಉದ್ಯಮಗಳು ತಮ್ಮ ನೇಮಕಾತಿ ನಿಯಮಗಳಿಗೆ ಇದೇ ರೀತಿಯ ತಿದ್ದುಪಡಿಗಳನ್ನು ಮಾಡಲು ಸಲಹೆ ನೀಡಲಾಗುವುದು. ಅಗತ್ಯ ವಯೋಮಿತಿ ಸಡಿಲಿಕೆಯನ್ನು ಕೂಡ ಮಾಡಲಾಗುವುದು” ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಮೂಲಗಳ ವರದಿಯ ಪ್ರಕಾರ ಈ ವರ್ಷ ಅಗ್ನಿಪಥ್ ಯೋಜನೆಯ ಮೂಲಕ ಸುಮಾರು 46,000 ಯುವಕರನ್ನು ಅಲ್ಪಾವಧಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಯೋಚಿಸಲಾಗಿತ್ತು. ಆದರೆ ಯೋಜನೆಯನ್ನು ವಿರೋಧಿಸಿ ರಕ್ಷಣಾ ಅಭ್ಯರ್ಥಿಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಕನಿಷ್ಟ 10 ರಾಜ್ಯಗಳಲ್ಲಿ ಹಿಂಸಾಚರಗಳು ವರದಿಯಾಗಿತ್ತು.