ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಕುಸ್ತಿಪಟುಗಳು 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಹೋರಾಟಕ್ಕೆ ವಿರೋಧ ಪಕ್ಷಗಳು, ಇತರೆ ಸಂಘಟನೆಗಳು, ಗಣ್ಯರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇದೇ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ (SKM) ಭಾನುವಾರ ಕುಸ್ತಿಪಟುಗಳನ್ನು ಬೆಂಬಲಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಪಂಜಾಬ್, ಹರಿಯಾಣ ಮತ್ತು ಯುಪಿಯಿಂದ ಬರುವ ಈ ಸಂಘಟನೆಯ ಹಲವು ಮುಖಂಡರು ಭಾನುವಾರ ಕುಸ್ತಿಪಟುಗಳಿಗೆ ಬೆಂಬಲ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಈ ಹಿಂದೆ ಕೃಷಿ ಕಾನೂನನ್ನು ರದ್ದುಗೊಳಿಸುವಂತೆ ದೇಶದ ಗಡಿಯಲ್ಲಿ ರೈತರು ಒಂದು ವರ್ಷ ಪ್ರತಿಭಟನೆ ನಡೆಸಿದ್ದರು. ಇವುಗಳ ನೇತೃತ್ವವನ್ನು ಎಸ್ಕೆಎಂ ವಹಿಸಿದ್ದರು. ಹರ್ಯಾಣ ಸಚಿವ ಅನಿಲ್ ವಿಜ್ ಅವರು ಕುಸ್ತಿಪಟುಗಳನ್ನು ಬೆಂಬಲಿಸಿದರು, ಅವರು ಮಧ್ಯಸ್ಥಿಕೆ ವಹಿಸುವುದಾಗಿ ಮತ್ತು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದರು.
ಕುಸ್ತಿಪಟುಗಳನ್ನು ಬೆಂಬಲಿಸಲು ರೈತರು ದೆಹಲಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಭಾರೀ ಭದ್ರತೆಯನ್ನು ಏರ್ಪಡಿಸಿದ್ದಾರೆ. ಜಂತರ್ ಮಂತರ್ ಜೊತೆಗೆ ರಾಜಧಾನಿಯ ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ಭದ್ರತಾ ತಪಾಸಣೆ ಮತ್ತು ಗಸ್ತು ಹೆಚ್ಚಿಸಲಾಗಿದೆ. ಏತನ್ಮಧ್ಯೆ, ತಮ್ಮ ವಿರುದ್ಧದ ಆರೋಪಗಳು ಕಾಂಗ್ರೆಸ್ ಪಿತೂರಿ ಎಂದು ಬ್ರಿಜ್ ಭೂಷಣ್ ಆರೋಪಿಸಿದರು.