ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮದ್ಯ ನೀತಿ ಹಗರಣದಲ್ಲಿ (Delhi Liquor Policy Case) ಬಂಧನವಾಗಿರುವ ಭಾರತೀಯ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ (K.Kavitha) ಅವರನ್ನು 3 ದಿನಗಳ ಕಾಲ ಸಿಬಿಐ ಕಸ್ಟಡಿಗೆ ವಹಿಸಲಾಗಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಿಂದಲೇ ಕೆ.ಕವಿತಾ ಅವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ನಂತರ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕವಿತಾ ಅವರನ್ನು ಏ.15 ರ ವರೆಗೆ ಸಿಬಿಐ ಕಸ್ಟಡಿಗೆ ವಹಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.
ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿತ್ತು. ನಂತರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ತಿಹಾರ್ ಜೈಲಿನಲ್ಲಿರುವಾಗಲೇ ಮತ್ತೊಂದು ಪ್ರಕರಣದಲ್ಲಿ ಗುರುವಾರ ಸಂಜೆ ಸಿಬಿಐ ಅವರನ್ನು ಬಂಧಿಸಿತು.
ಮದ್ಯದ ಪರವಾನಿಗೆಗಾಗಿ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ 100 ಕೋಟಿ ರೂ. ಲಂಚ ನೀಡುವ ಸಂಬಂಧ ಸಾಕ್ಷಿ ಹೇಳಿಕೆಗಳು, ವಾಟ್ಸಾಪ್ ಚಾಟ್ಗಳು ಮತ್ತು ಹಣಕಾಸಿನ ದಾಖಲೆಗಳು ಅವರನ್ನು ಸಂಚು ರೂಪಿಸಿದವರಲ್ಲಿ ಪ್ರಮುಖರೆಂದು ವಾದಿಸಿ, ಐದು ದಿನಗಳ ಕಾಲ ಕವಿತಾ ಅವರನ್ನು ಸಿಬಿಐ ಕಸ್ಟಡಿಗೆ ಕೋರಿತ್ತು.