ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ರಾಜಧಾನಿ ದೆಹಲಿಯಲ್ಲಿ ಮತ್ತೆ ಭದ್ರತಾ ಎಚ್ಚರಿಕೆ ಜಾರಿಯಾಗಿದೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೈಬಾ ಕೆಂಪುಕೋಟೆ ಹಾಗೂ ಚಾಂದಿನಿ ಚೌಕ್ ಪ್ರದೇಶವನ್ನು ಗುರಿಯಾಗಿಸಿ ಐಇಡಿ ಸ್ಫೋಟಕಗಳನ್ನು ಬಳಸಿ ದಾಳಿಗೆ ಸಂಚು ರೂಪಿಸಬಹುದು ಎಂಬ ಗುಪ್ತಚರ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಈ ಕುರಿತು ಇನ್ನು ಅಧಿಕೃತ ಮಾಹಿತಿ ಹೊರಬಂದಿಲ್ಲ.
ಫೆಬ್ರವರಿ 6ರಂದು ಇಸ್ಲಾಮಾಬಾದ್ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 31 ಮಂದಿ ಮೃತಪಟ್ಟಿದ್ದು, 160ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ದಾಳಿಯ ಹೊಣೆ ಇಸ್ಲಾಮಿಕ್ ಸ್ಟೇಟ್ ಹೊತ್ತಿದ್ದರೂ, ಅದರ ಪ್ರತಿಕಾರವಾಗಿ ಲಷ್ಕರ್-ಎ-ತೈಬಾ ಸಂಘಟನೆ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಯತ್ನವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:
ಇದರ ನಡುವೆ 2025ರ ನವೆಂಬರ್ 10ರಂದು ರೆಡ್ ಫೋರ್ಟ್ ಮೆಟ್ರೋ ಸಮೀಪ ಸಂಭವಿಸಿದ ಕಾರು ಸ್ಫೋಟದ ಪ್ರಕರಣ ಇನ್ನೂ ತನಿಖೆಯಲ್ಲಿದೆ. ಆ ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿ, ಅನೇಕರು ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದ್ದು, ತನಿಖೆಗೆ NIAಗೆ ಹೆಚ್ಚುವರಿ ಸಮಯ ನೀಡಲಾಗಿದೆ.
ಹೊಸ ಬೆದರಿಕೆ ಹಿನ್ನೆಲೆ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಿ, ಧಾರ್ಮಿಕ ಹಾಗೂ ಐತಿಹಾಸಿಕ ಕೇಂದ್ರಗಳ ಭದ್ರತೆ ಹೆಚ್ಚಿಸಲಾಗಿದೆ.



