ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಇಂದು ದೆಹಲಿ ಸೇವಾ ಮಸೂದೆ ( ತಿದ್ದುಪಡಿ ) ಅಂಗೀಕಾರವಾಗಿದೆ.
ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಸೂದೆಯ ಮಹತ್ವವನ್ನು ವಿವರಿಸಿದರು.
ಬಳಿಕ ಮಸೂದೆ ಅಂಗೀಕಾರವಾಗುತ್ತಿದ್ದಂತೆಯೇ ಹಲವು ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆಯ ಸಂಕೇತವಾಗಿ ಲೋಕಸಭೆಯಿಂದ ಹೊರನಡೆದರು.
ಇದರ ನಡುವೆ ವಿಧೇಯಕದ ಪ್ರತಿಯನ್ನು ಹರಿದು ಕುರ್ಚಿಯತ್ತ ಎಸೆದ ಎಎಪಿ ಸದಸ್ಯ ಸುಶೀಲ್ ಕುಮಾರ್ ರಿಂಕು ಅವರನ್ನು ಅಶಿಸ್ತಿನ ವರ್ತನೆಗಾಗಿ ಸ್ಪೀಕರ್ ಓಂ ಬಿರ್ಲಾ ಅವರು ಅಮಾನತುಗೊಳಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ‘ಪ್ರಧಾನಿಯಾದ ಮೇಲೆ ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡುವುದಾಗಿ ಮೋದಿ ಅವರೇ ಹೇಳಿದ್ದರು. ಆದರೆ ಇಂದು ಈ ಜನ ದೆಹಲಿ ಜನರ ಬೆನ್ನಿಗೆ ಚೂರಿ ಹಾಕಿದ್ದಾರೆ’ ಎಂದು ಟ್ವೀಟ್ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.