ಹೊಸದಿಗಂತ ವರದಿ,ಕಲಬುರಗಿ:
ಧಾರವಾಡ ಮಾದರಿಯಂತೆ ಕಲಬುರಗಿಯಲ್ಲೂ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ (ಅಕ್ಸಾ) ವತಿಯಿಂದ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅಕ್ಸಾ ಅಧ್ಯಕ್ಷ ಕಾಂತಕುಮಾರ್ ಅವರ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾಕಾರರು ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ತಕ್ಷಣವೇ 56,432 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಎಂಟು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಕೆಪಿಎಸ್ಸಿಯಲ್ಲಿ ನಡೆದಿದೆ ಎನ್ನಲಾದ ಕೆಎಎಸ್, ಸಿಟಿಐ, ಪಿಡಿಒ ಸೇರಿದಂತೆ ವಿವಿಧ ನೇಮಕಾತಿಗಳ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ ಅವರು,ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.



