ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.

ಆ.22ರಿಂದ ಮುಂದಿನ ಮೂರು ದಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹಾಗೂ ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರದಲ್ಲಿ ಆ. 24ರಂದು ಭಾರಿ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಚದುರಿದಂತೆ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಭಾನುವಾರ ಬೆಂಗಳೂರು, ಬೆಂ. ಗ್ರಾಮಾಂತರ, ಹಾಸನ, ಮಂಡ್ಯ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಹವಾಮಾನ ವೈಪರೀತ್ಯ ವಿಜ್ಞಾನಿ ಎಂ.ಬಿ.ರಾಜೇಗೌಡ ಮಾತನಾಡಿ, ಸದ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮುಂದಿನ 2-3 ದಿನಗಳಲ್ಲಿ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಆದರೆ, ಚಂಡಮಾರುತ ಉಂಟಾಗಲಿದೆಯೇ ಅಥವಾ ಇಲ್ಲವೋ ಎಂಬ ಕುರಿತು ಒಂದೆರಡು ದಿನಗಳಲ್ಲಿ ನಿಖರ ಮಾಹಿತಿ ಸಿಗಲಿದೆ. ಒಟ್ಟಿನಲ್ಲಿ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಇದರ ಪ್ರಭಾವದಿಂದ ರಾಜ್ಯಕ್ಕೂ ಮಳೆಯಾಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!