ಹೊಸದಿಗಂತ ವರದಿ ಬಾಗಲಕೋಟೆ :
ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ನವನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಮಯಕ್ಕೆ ಬಸ್ ಸೌಲಭ್ಯ ದೊರೆಯದೇ ಪ್ರತಿದಿನ ತಡವಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಉಪ ಲೋಕಾಯುಕ್ತರು, ನವನಗರ ಬಸ್ ನಿಲ್ದಾಣದಲ್ಲಿನ ವ್ಯವಸ್ಥೆ, ಸಮರ್ಪಕ ಬಸ್ ಸಂಚಾರದ ಕೊರತೆ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ, ಅವಧಿ ಮುಗಿದ ಜ್ಯೂಸ್ ಬಾಟಲ್, ಹೊಟೆಲ್ ನಲ್ಲಿ ತಿಂಡಿ ಪದಾರ್ಥಗಳನ್ನು ತೆರೆದಿಟ್ಟಿರುವುದು ಸೇರಿದಂತೆ ಇತರೆ ಸಮಸ್ಯೆಗಳನ್ನು ಕಂಡು ಸು ಮೋಟೋ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದರು.
ಬಸ್ ವಿಳಂಬದಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಶಾಲಾ-ಕಾಲೇಜು ಆರಂಭ ಮತ್ತು ಮುಕ್ತಾಯದ ವೇಳೆಗೆ ಅಗತ್ಯ ಪ್ರಮಾಣದಲ್ಲಿ ಬಸ್ಗಳನ್ನು ಓಡಿಸುವಂತೆ ಸಂಬಂಧಪಟ್ಟ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಟಿ.ಪಾಟೀಲ ಅವರಿಗೆ ಸೂಚನೆ ನೀಡಿದರು.



