‘ದೇವನಹಳ್ಳಿ ಚಲೋ’: ಸಿಎಂ ಸಿದ್ದರಾಮಯ್ಯ ಭೇಟಿಯಾದ ನಟ ಪ್ರಕಾಶ್ ರಾಜ್

ಹೊಸ ದಿಗಂತ ಡಿಜಿಟಲ್ ಡೆಸ್ಕ್;

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ 13 ಹಳ್ಳಿಗಳ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಬುಧವಾರ ನಡೆದ ‘ದೇವನಹಳ್ಳಿ ಚಲೋ’ದಲ್ಲಿ ಪಾಲ್ಗೊಂಡ ರೈತರನ್ನು ಬಂಧಿಸಿದ್ದದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ಸಿಎಂ ಗೃಹ ಕಚೇರಿಗೆ ಆಗಮಿಸಿದ್ದ ನಟ ಪ್ರಕಾಶ್ ರಾಜ್, ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳನ್ನು ಕುಮಾರಕೃಪಾ ಬಳಿ ಪೊಲೀಸರು ತಡೆದಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಅವಕಾಶ ನೀಡಿದ್ದಾರೆ.

ಸಿಎಂ ಜೊತೆಗೆ ಸಮಾಲೋಚನೆ ವೇಳೆ ಪ್ರಕಾಶ್ ರಾಜ್, 13 ಹಳ್ಳಿಗಳ ರೈತರು 1,777 ಎಕರೆ ಭೂಮಿಯನ್ನು ಯಾವುದೇ ಕಾರಣಕ್ಕೂ ಕೆಐಎಡಿಬಿ ಮೂಲಕ ಕಾರ್ಪೋರೇಟ್ ಕಂಪನಿಗಳಿಗೆ ನೀಡಬಾರದು. ಸರ್ಕಾರ ಏಕಪಕ್ಷೀಯ ನಿರ್ಧಾರ ಸರಿಯಲ್ಲ, ರೈತರು ಹಾಗೂ ಹೋರಾಟಗಾರರರ ಬಂಧನ ಖಂಡನೀಯ. ರೈತರ ಭೂಮಿಯನ್ನು ಕಸಿದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರಾಜ್, ಫೈನಲ್ ನೋಟಿಫಿಕೇಷನ್ ಆಗಿದೆ. ಡಿನೋಟಿಫಿಕೇಷನ್ ಹೊರಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಮುಖ್ಯಮಂತ್ರಿ ನಮ್ಮ ಮಾತನ್ನು ಸಹಾನುಭೂತಿಯಿಂದ ಕೇಳಿಸಿಕೊಂಡಿದ್ದಾರೆ. ಜನರ ಹೋರಾಟಕ್ಕೆ ಸ್ಪಂದಿಸುವುದು ಮುಖ್ಯ. ಜುಲೈ 4 ರವರೆಗೂ ಹೋರಾಟ ಮುಂದುವರೆಸುತ್ತೇವೆ. 13 ಹಳ್ಳಿಗಳಲ್ಲಿ ಕುಟುಂಬದ ಜನರು ಸರ್ಕಾರದ ಮುಂದೆ ಕೈ ಚಾಚಿಲ್ಲ, ಕೈಗಾರಿಕೆಗಳಿಂದ ಏನಾಗಿದೆ ಎಂಬುದು ನಮಗೆ ತಿಳಿದಿದೆ ಎಂದರು.

ವಿಪರ್ಯಾಸವೆಂದರೆ ಬಿಜೆಪಿ ಆಡಳಿತದಲ್ಲಿ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾಗ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ನಿಲ್ಲುವುದಾಗಿ ಭರವಸೆ ನೀಡಿದ್ದರು. ಆದರೆ ಇದೀಗ ಸಿಎಂ ಆಗಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ್ದಾರೆ. ಇದು ದ್ರೋಹವಾಗಿದೆ ಎಂದು ಟೀಕಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಹಳ್ಳಿಗಳ ರೈತರ 1,777 ಎಕರೆ ಭೂಮಿಯನ್ನು ವಶಪಡಿಸಿಕೊಂಡು, ಕೆಐಎಡಿಬಿ ಮೂಲಕ ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ರಾಜ್ಯ ಸರ್ಕಾರ 10 ಹಳ್ಳಿಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಸರ್ಕಾರದ ಏಕಪಕ್ಷೀಯ ನಿರ್ಧಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಸಂಯುಕ್ತ ಹೋರಾಟ-ಕರ್ನಾಟಕ ದೇವನಹಳ್ಳಿ ಚಲೋ ಹೋರಾಟಕ್ಕೆ ಕರೆ ನೀಡಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!