ಹೊಸದಿಗಂತ ವರದಿ ಮಡಿಕೇರಿ:
ಮೇ ಮೊದಲ ವಾರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿ ಕಾರ್ಯಕ್ರಮಗಳೇಕ ಬಿಜೆಪಿಗೆ ಶ್ರೀರಕ್ಷೆಯಾಗಿದೆ ಎಂದು ವಿಧಾನಸಭಾ ಮಾಜಿ ಅಧ್ಯಕ್ಷ, ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ನುಡಿದರು.
ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಅವರ ಮನೆಯಲ್ಲಿ ನಡೆದ ಸೋಮವಾರಪೇಟೆ ತಾಲೂಕು ಬಿಜೆಪಿ ಕಾರ್ಯಕರ್ತರ ಬೃಹತ್ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಜನ ಸಾಮಾನ್ಯರ ಶ್ರೇಯೋಭಿವೃದ್ದಿಗೆ ಒತ್ತು ನೀಡಿದ ಸರ್ಕಾರಗಳಿದ್ದು, ಮುಂದಿನ ಅವಧಿಗೂ ಕೇಂದ್ರ, ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಹಾಮಾರಿ ಕೊರೋನಾ ನಿಗ್ರಹದಲ್ಲಿ ಮೋದಿಜಿ ಸರ್ಕಾರ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದ ಅವರು, ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು ಅತಿಯಾದ ಮಳೆಯಿಂದ ರಸ್ತೆಗಳು ಹದಗೆಟ್ಟಿವೆ. ಈ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಗಾಗಿ ರಾಜ್ಯ ಸರ್ಕಾರ ಬಜೆಟ್’ನಲ್ಲಿ 100 ಕೋಟಿ ಹಣ ಒದಗಿಸಿದೆ ಎಂದು ಹೇಳಿದರು.