ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಪ್ರಕರಣದಲ್ಲಿ ಪ್ರಧಾನ ಪಾತ್ರ ವಹಿಸಿರುವ ಮಾನವ ತಲೆಬುರುಡೆಗೆ ಸಂಬಂಧಿಸಿ ಸೌಜನ್ಯಾಳ ಸಂಬಂಧಿ ವಿಠಲ ಗೌಡರ ಆಪ್ತ ಪ್ರದೀಪ್ ಗೌಡ ಬೆಳ್ತಂಗಡಿ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ.
ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾ. ಸಂದೇಶ್.ಕೆ ಅವರ ಮುಂದೆ ಹಾಜರಾದ ಪ್ರದೀಪ್ ಗೌಡ, ಬಿಎನ್ಎಸ್ಎಸ್ 183 ಅಡಿ ತಮ್ಮ ಹೇಳಿಕೆ ದಾಖಲು ಮಾಡಿದ್ದಾರೆ.
ಪ್ರಕರಣದಲ್ಲಿ ಬುರುಡೆ ತಂದುಕೊಟ್ಟವರು ವಿಠಲ ಗೌಡ ಎಂಬುದನ್ನು ಸಾಬೀತುಪಡಿಸಲು ಪ್ರದೀಪ್ ಹೇಳಿಕೆ ದಾಖಲು ಮಾಡಲಾಗಿದ್ದು, ಬಳಿಕ ಮತ್ತೆ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಲಾಗಿದೆ.
ಪ್ರದೀಪ್ ಗೌಡ ಅವರನ್ನು ಈಗಾಗಲೇ ಎಸ್ಐಟಿ ಅಧಿಕಾರಿಗಳು ಸತತ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂದರ್ಭ ಹಲವು ಮಾಹಿತಿಗಳನ್ನು ಅವರು ಕಲೆಹಾಕಿದ್ದಾರೆ. ಇದರ ಮುಂದುವರಿದ ಭಾಗವಾಗಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.



