ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕ್ಸಿಯಮ್ -4 ಕಾರ್ಯಾಚರಣೆಯ ಯಶಸ್ವಿ ಉಡಾವಣೆಯನ್ನು ಜಗತ್ತು ಸಂಭ್ರಮಿಸಿದೆ. ಇದರ ಜತೆ ಜತೆಗೇ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕೂಡ ತನ್ನದೇ ಆದ ವಿಶಿಷ್ಟ ಮೈಲಿಗಲ್ಲನ್ನು ದಾಖಲಿಸಿದೆ. ಬಾಹ್ಯಾಕಾಶ ಆಧಾರಿತ ಪೌಷ್ಟಿಕಾಂಶ ಸಂಶೋಧನೆಗಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೆಸರುಕಾಳು ಮತ್ತು ಮೆಂತ್ಯ (ಮೇಥಿ) ಒಣ ಬೀಜಗಳನ್ನು ಕಳುಹಿಸಿದೆ.
ಗಗನಯಾತ್ರಿಗಳು ಹೆಚ್ಚಾಗಿ ಬಾಹ್ಯಾಕಾಶದಲ್ಲಿ ಪೌಷ್ಠಿಕಾಂಶದ ಕೊರತೆ ಸೇರಿದಂತೆ ಗಮನಾರ್ಹ ಆರೋಗ್ಯ ಸವಾಲುಗಳನ್ನು ಎದುರಿಸುತ್ತಾರೆ. ಇದಕ್ಕೆ ಪರಿಹಾರವಾಗಿ ಬಾಹ್ಯಾಕಾಶದಲ್ಲಿ ತಾಜಾ, ಮೊಳಕೆಯೊಡೆದ ಆಹಾರ ಮೂಲಗಳಾಗಿ ಬಳಸಲು ಕೃಷಿ ವಿವಿಯು ಎರಡು ಭಾರತೀಯ ಆಹಾರ ಪ್ರಧಾನ ಬೆಳೆಗಳಾದ ಹಸಿರುಕಾಳು ಮತ್ತು ಮೆಂತ್ಯ ಬೀಜಗಳನ್ನು ಕಳುಹಿಸಿದೆ.
ಮೊಳಕೆಯೊಡೆದ ಬೀಜಗಳು ಪೌಷ್ಟಿಕವಾಗಿರುತ್ತವೆ ಎಂದು ತಿಳಿದುಬಂದಿದೆ. ಅನೇಕ ಸಲಾಡ್ ಸಸ್ಯಗಳಿಗಿಂತ ಹೆಚ್ಚಿನ ಆಹಾರ ಮೌಲ್ಯವನ್ನು ಇವು ನೀಡುತ್ತವೆ. ಭಾರತೀಯ ಪಾಕ ಪದ್ಧತಿಯಲ್ಲಿ ವ್ಯಾಪಕವಾಗಿ ಬಳಸಲಾಗುವ ಹಸಿರುಕಾಳು, ಅರೆ-ಶುಷ್ಕ ಪರಿಸ್ಥಿತಿಗಳಲ್ಲಿ ಬೆಳೆಯುತ್ತದೆ ಮತ್ತು ಬಾಹ್ಯಾಕಾಶ ಕೃಷಿಗೆ ಸೂಕ್ತವಾಗಿದೆ. ಮತ್ತೊಂದೆಡೆ, ಮೆಂತ್ಯ ಪೌಷ್ಟಿಕಾಂಶದ ಸಂಯುಕ್ತಗಳಿಂದ ಸಮೃದ್ಧವಾಗಿದೆ ಮತ್ತು ರೋಗನಿರೋಧಕ ಶಕ್ತಿ, ಸುಧಾರಿತ ಮೂಳೆ ಆರೋಗ್ಯ, ಮೂತ್ರಪಿಂಡದ ಕಲ್ಲುಗಳ ಅಪಾಯ ಕಡಿಮೆ ಮತ್ತು ಹೃದಯ ರಕ್ತನಾಳದ ಬೆಂಬಲ ಸೇರಿದಂತೆ ಹಲವಾರು ಔಷಧೀಯ ಪ್ರಯೋಜನಗಳನ್ನು ನೀಡುತ್ತದೆ ಎನ್ನಲಾಗಿದೆ.