ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭೆ ಚುನಾವಣಾ ಅಖಾಡದಲ್ಲಿ ಬಿರುಸಿನ ಪ್ರಚಾರ ನಡೆಸಿದ ರಾಹುಲ್ ಗಾಂಧಿ ಅವರು, ತಮ್ಮ ಮಿತ್ರಪಕ್ಷದ ವಿರುದ್ಧವೇ ಗುಡುಗಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ಹೊರಹಾಕಿದ ರಾಹುಲ್ ಗಾಂಧಿ, ಭ್ರಷ್ಟಾಚಾರದ ವಿಷಯದಲ್ಲಿ ಮಮತಾ ಅವರು ಮೋದಿ ಅವರಿಗಿಂತ ಯಾವುದೇ ರೀತಿಯಲ್ಲೂ ಕಮ್ಮಿಯಿಲ್ಲ ಎಂದು ಟೀಕಿಸಿದ್ದು, ‘ಇಂಡಿಯಾ’ ಮೈತ್ರಿಕೂಟದಲ್ಲಿ ಹೊಸ ಸಂಚಲನ ಮೂಡಿಸಿದೆ.
ಈ ಕುರಿತು ಟ್ವೀಟ್ ಮಾಡಿದ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದಲ್ಲಿ ನೀವು ಟಿಎಂಸಿ ಜೊತೆ ಉತ್ತಮ ಒಡನಾಟವಿದ್ದರೆ ನಿಮಗೆ ಕೆಲಸ ಸಿಗುತ್ತದೆ. ಇಲ್ಲವಾದರೆ ನಿಮಗೆ ಯಾವ ಪ್ರಯೋಜವು ಇಲ್ಲ. ಕೇವಲ ಹತಾಶೆಯಿಂದ ಕೈ ಮಸೆಯುತ್ತಾ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಇದೆ ಎಂದು ದೂರಿದ್ದಾರೆ.
ಬಿಜೆಪಿ ಮತ್ತು ಟಿಎಂಸಿ ಇಬ್ಬರ ಭ್ರಷ್ಟಾಚಾರದಿಂದಾಗಿ ಪಶ್ಚಿಮ ಬಂಗಾಳ ರಾಜ್ಯವು ನಾಶವಾಗಿದೆ. ಭ್ರಷ್ಟಾಚಾರದಲ್ಲಿ ಮಮತಾ ಜಿ ಅವರು ಮೋದಿ ಜಿ ಅವರಿಗಿಂತ ಯಾವುದೇ ರೀತಿಯಲ್ಲೂ ಕಮ್ಮಿಯಿಲ್ಲ ಎಂದು ರಾಹುಲ್ ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಈ ಮಾತು ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಯಾವ ರೀತಿ ಪ್ರತ್ಯುತ್ತರ ಬರಲಿದೆ ಎಂದು ಕಾದುನೋಡಬೇಕಿದೆ.



