ಜನರ ಕೆಲಸದಲ್ಲಿ ವಿಳಂಬವಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಹೊಸದಿಗಂತ ವರದಿ,ಮಂಡ್ಯ:

ರೈತರು ಮತ್ತು ಸಾರ್ವಜನಿಕರ ಕೆಲಸ ಮಾಡಿಕೊಡಲು ತಾಲ್ಲೂಕು ಕಚೇರಿಗಳಲ್ಲಿ ಅನಗತ್ಯ ವಿಳಂಬ ಹಾಗೂ ಹಣದ ಬೇಡಿಕೆ ಇಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಸಾರ್ವಜನಿಕರ ಕೆಲಸಕ್ಕೆ ವಿಳಂಬ ಮಾಡುವುದು ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಗೊಳ್ಳಬೇಕಾಗುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ತೊಂದರೆಗಳಿದ್ದಲ್ಲಿ ಶಾಸಕರ ಗಮನಕ್ಕೆ ತನ್ನಿ. ಜನಪರ ಹೊಸ ಯೋಜನೆಗಳನ್ನು ರೂಪಿಸಿ ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದು ಸೂಚಿಸಿದರು.

ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೊಳ್ಳಿ. ರೈತರ ಕೃಷಿ ಮಾಡಲು ಬೇಕಿರುವ ವಿದ್ಯುತ್ ವ್ಯವಸ್ಥೆಯನ್ನು ಬೆಳಿಗ್ಗೆ ಸಮಯದಲ್ಲಿ ಕಲ್ಪಿಸುವಂತೆ ಸೂಚಿಸಿದರಲ್ಲದೆ, ರೈತರು ಬೆಳೆಯುತ್ತಿರುವ ಬೆಳೆಗಳಿಗೆ ತೊಂದರೆಯಾಗದಂತೆ, ಜಿಲ್ಲೆಯ ಕೊನೆಯ ಭಾಗದ ಬೆಳೆಗಳಿಗೆ ನಾಲೆಗಳ ಮೂಲಕ ನೀರು ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು. ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಗ್ಯಾರಂಟಿ ಯೋಜನೆಗೆ ಸಿದ್ಧತೆ ರೂಪಿಸಲು ಸೂಚನೆ :
ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಣೆ ಹಾಗೂ ಸೂಚನೆಗಳನ್ನು ನಿಗದಿತ ಸಮಯದಲ್ಲಿ ಅಧಿಕಾರಿಗಳು ಸರ್ಕಾರಕ್ಕೆ ಒದಗಿಸಬೇಕಾಗುತ್ತದೆ. ಅದಕ್ಕೆ ಅಗತ್ಯ ಸಿದ್ಧತೆ ಮತ್ತು ತಂಡಗಳನ್ನು ಮಾಡಿಕೊಂಡು ಅರ್ಹ ಫಲಾನುಭವಿಗಳು ಬಿಟ್ಟುಹೋಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ರಸ್ತೆಗಳ ಅಭಿವೃದ್ಧಿ ಆಧ್ಯತೆಗೆ ಸೂಚನೆ :
ಜಿಲ್ಲೆಯ ಬಹಳಷ್ಟು ರಸ್ತೆಗಳು ಗುಂಡಿಗಳಿಂದ ಕೂಡಿದೆ. ಇಂತಹ ಸಮಸ್ಯೆಗಳಿಗೆ , ಕೂಡಲೇ ಯೋಜನೆ ರೂಪಿಸಿ ರಸ್ತೆಗಳ ಅಭಿವೃದ್ದಿಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ತಿಳಿಸಿದರು.
ಮೈ ಶುಗರ್ ಕಾರ್ಯಾರಂಭಕ್ಕೆ ಸರ್ಕಾರ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ನಿರ್ವಹಿಸಿ. ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆದಲಾಗುವುದು. ಇದಕ್ಕೆ ಬೇಕಿರುವ ಪೂರಕ ಮಾಹಿತಿಯನ್ನು ಸಿದ್ಧ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಮಳವಳ್ಳಿ ಶಾಸಕ ಪಿ ಎಂ ನರೇಂದ್ರಸ್ವಾಮಿ ಮಾತನಾಡಿ, ಮುಂಗಾರು ಆರಂಭವಾಗಲಿದೆ, ಕೃಷಿ ಇಲಾಖೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿ. ಮಣ್ಣಿನ ಸವಕಳಿಯಾಗದಂತೆ ಫಲವತ್ತತೆ ಕಾಪಾಡುವ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ. ನೀರಿನ ಮಿತವ್ಯಯ ಬಳಕೆ ಮೈಕ್ರೋ ಇರಿಗೇಷನ್, ಅಂತರ್ಜಲ ಮರುಪೂರಣದ ಬಗ್ಗೆ ಚಿಂತಿಸಿ ಅನುಷ್ಠಾನ ಗೊಳಿಸುವಂತೆ ಸಲಹೆ ನೀಡಿದರು.

ಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಹೊಸ ಯೋಜನೆಗಳನ್ನು ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿ.ಬಜೆಟ್ ಮೂಲಕ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನ ತರುವ ಪ್ರಯತ್ನಕ್ಕೆ ಅಧಿಕಾರಿಗಳು ಸಹಕಾರ ನೀಡುವಂತೆ ಸಲಹೆ ನೀಡಿದರು.

ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಾತನಾಡಿ, ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆ. ಮುಂಗಾರು ಮಳೆ ಆರಂಭವಾಗಲಿದೆ. ರೈತರಿಗೆ ಅಗತ್ಯವಾಗಿರುವ ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ಎಲ್ಲವನ್ನೂ ಶೇಖರಣೆ ಮಾಡಿ ಇಟ್ಟುಕೊಳ್ಳಿ ಎಂದರು.

ಮಂಡ್ಯ ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವುದು, ಕ್ಯಾನ್ಸರ್ ಆಸ್ಪತ್ರೆಯ ಅಗತ್ಯತೆ ಇದೆ. ಯು.ಜಿ.ಡಿ ಸಮಸ್ಯೆ ಹಾಗೂ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಳ್ಳರ ಸಮಸ್ಯೆ ಇದೆ ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಮಾತನಾಡಿ ಸರ್ವೆ ಇಲಾಖೆಯಲ್ಲಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಖಾತೆಗಳು, ಪೋಡಿ ಮುಂತಾದ ಕೆಲಸಗಳನ್ನು ವೇಗವಾಗಿ ಜನರಿಗೆ ಮಾಡಿಕೊಡಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರು ಮಾತನಾಡಿ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಅವುಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ಮಾತನಾಡಿ ಜಿಲ್ಲೆಯ ಸ್ಥಿತಿ ಗತಿ,ಹಾಗೂ ಮಳೆ ಹಾನಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ವಿವರಿಸಿದರು.

ಶಾಸಕ ರವಿಕುಮಾರ್‌ಗೌಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!