ಹೊಸದಿಗಂತ ವರದಿ ಬೆಳಗಾವಿ:
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ನಲ್ಲಿ ನಡೆಯಲಿರುವ ಅಧಿವೇಶನದ ದಿನಾಂಕವನ್ನು ಸರ್ಕಾರ ಘೋಷಣೆ ಮಾಡಲಿದೆ. ನಾವು ಸಿದ್ದತೆ ಪರಿಶೀಲನೆಗೆ ಆಗಮಿಸಿದ್ದೇವೆ, ಈ ಅಧಿವೇಶನಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.
ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಮ್ಮೆ ಸಿದ್ಧತೆ ಪರಿಶೀಲಿಸಲು ಆಗಮಿಸುತ್ತೇವೆ. ಈಗಾಗಲೇ ಸಿದ್ಧತೆಗಳಿಗಾಗಿ ಹತ್ತು ಸಮಿತಿಗಳನ್ನು ರಚನೆ ಮಾಡಲಾಗಿದೆ. ಅಗತ್ಯ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.
ಅಧಿವೇಶನದ ವೇಳೆ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಈ ಬಾರಿ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಇದರಿಂದ ಪ್ರತಿಭಟನೆಗಳು ಕಡಿಮೆ ಆಗಬಹುದು ಎಂದು ಖಾದರ್ ಮಾಹಿತಿ ನೀಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ. ಈ ಅಧಿವೇಶನ ಸಂದರ್ಭದಲ್ಲಿ ಬುಧವಾರ ಹಾಗೂ ಗುರುವಾರ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗಾಗಿಯೇ ಮೀಸಲಿಡಲು ನಿರ್ಧರಿಸಲಾಗಿದೆ ಎಂದರು.