ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಗೀತೆಗೆ ಅಗೌರವ ತೋರಿದ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ದಾಖಲಾಗಿರುವ ದೂರನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣದಲ್ಲಿ ಮುಂಬೈನ ವಿಶೇಷ ನ್ಯಾಯಾಲಯವುಮಮತಾ ಬ್ಯಾನರ್ಜಿ ವಿರುದ್ಧ ಕೆಳ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ರದ್ದುಗೊಳಿಸಿತು ಮತ್ತು ಮರು ವಿಚಾರಣೆಗೆ ಆದೇಶಿಸಿತು.
ಬಳಿಕ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ದೂರನ್ನು ರದ್ದುಗೊಳಿಸಬೇಕು ಎಂದು ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಧ್ಯೆ ಪ್ರವೇಶಿಸಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ.
2021ರ ಡಿಸೆಂಬರ್ನಲ್ಲಿ ಮಮತಾ ಬ್ಯಾನರ್ಜಿ ಮುಂಬೈಗೆ ಭೇಟಿ ನೀಡಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಆ ಸಮಾರಂಭದಲ್ಲಿ ರಾಷ್ಟ್ರಗೀತೆ ಹಾಡುವಾಗ ಅವರು ಎದ್ದುನಿಂತು ಗೌರವ ತೋರಿಸಲಿಲ್ಲ. ಈ ಮೂಲಕ ರಾಷ್ಟ್ರಗೀತೆಗೆ ಅವಮಾನಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟು ಈ ಸಮನ್ಸ್ ಜಾರಿ ಮಾಡಿರುವ ನ್ಯಾಯಾಲಯ (Mumbai Court), ಮಮತಾ ಬ್ಯಾನರ್ಜಿಯವರು ಒಬ್ಬರು ಮುಖ್ಯಮಂತ್ರಿ. ಅನುಮೋದನೆಯ ಅಗತ್ಯವಿಲ್ಲ ಮತ್ತು ಆರೋಪಿ ವಿರುದ್ಧ ಮುಂದಿನ ಪ್ರಕ್ರಿಯೆ ನಡೆಸಲು ಯಾವುದೇ ಅಡ್ಡಿಯೂ ಇಲ್ಲ ಎಂದು ಹೇಳಿತ್ತು.
ಅಂದು ರಾಷ್ಟ್ರಗೀತೆ ಹಾಡುವಾಗ ಅವರು ಥಟ್ಟನೆ ನಿಲ್ಲಿಸಿ, ವೇದಿಕೆಯಿಂದ ನಿರ್ಗಮಿಸಿದ್ದು ಯೂಟ್ಯೂಬ್, ಡಿವಿಡಿಯಲ್ಲಿರುವ ವಿಡಿಯೋ ಕ್ಲಿಪ್ನಿಂದ ಸ್ಪಷ್ಟವಾಗಿದೆ. ಈ ವಿಡಿಯೋಗಳನ್ನು ದೂರುದಾರರು ನಮಗೆ ನೀಡಿದ್ದಾರೆ. ರಾಷ್ಟ್ರಗೀತೆಗೆ ಅವಮಾನ ಮಾಡುವುದು ರಾಷ್ಟ್ರೀಯ ಗೌರವ ಕಾಯ್ದೆ, 1971ರ ಸೆಕ್ಷನ್ 3ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ. ಅದನ್ನು ಮಮತಾ ಬ್ಯಾನರ್ಜಿ ಮಾಡಿರುವುದು ವಿಡಿಯೋದಲ್ಲಿ ಕಾಣುತ್ತದೆ ಎಂದು ಕೋರ್ಟ್ ಹೇಳಿದೆ.
ಯಾವುದೇ ಸಂದರ್ಭದಲ್ಲಿ ಯಾರಾದರೂ ರಾಷ್ಟ್ರಗೀತೆ ಹಾಡುತ್ತಿರಲಿ ಅಥವಾ ಇನ್ಯಾವುದೇ ಮೂಲದಿಂದ ಅದು ಪ್ರಸಾರವಾಗುತ್ತಿರಲಿ, ಆ ಸಮಯದಲ್ಲಿ ಅದನ್ನು ಕೇಳುತ್ತಿರುವವರು ಎದ್ದುನಿಲ್ಲಬೇಕು ಎಂದು 2015ರಲ್ಲಿ ಗೃಹ ಇಲಾಖೆ ಆದೇಶ ಹೊರಡಿಸಿತ್ತು. ಅದನ್ನು ಮಮತಾ ಬ್ಯಾನರ್ಜಿ ಉಲ್ಲಂಘಿಸಿದ್ದಾರೆ ಎಂದು ವಿವೇಕಾನಂದ ಗುಪ್ತಾ ಆರೋಪಿಸಿದ್ದರು.