ಹೊಸದಿಗಂತ ವರದಿ ಕಲಬುರಗಿ:
ರಾಜ್ಯಪಾಲರನ್ನು ಅಸ್ತ್ರವನ್ನಾಗಿಸಿಕೊಂಡು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸದನದಲ್ಲಿ ರಾಜ್ಯಪಾಲರಿಗೆ ಅಗೌರವ ತೋರಿದ್ದು, ಸಂವಿಧಾನಿಕ ಹುದ್ದೆಗೆ ಮಾಡಿದ ದೊಡ್ಡ ಅಪಮಾನ ಎಂದು ಮಾಜಿ ಸ್ಪೀಕರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಜಿಲ್ಲೆಯ ಸೇಡಂ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರ ಬರೆದುಕೊಟ್ಟಿದ್ದನ್ನು ಭಾಷಣ ಮಾಡುವುದು ಸಂಪ್ರದಾಯ. ಹಾಗೇಂದ ಮಾತ್ರಕ್ಕೆ ಕೇಂದ್ರ ಸರ್ಕಾರದ ವಿರುದ್ಧ, ಸರ್ಕಾರದ ಯೋಜನೆಗಳ ವಿರುದ್ಧ ಮಾತನಾಡಬೇಕು ಅಂತೇನಿಲ್ಲ ಎಂದರು.
ರಾಜ್ಯಪಾಲರದ್ದು ಸಂವಿಧಾನ ಬದ್ಧವಾದ ಜವಾಬ್ದಾರಿಯುತ ಸ್ಥಾನವಾಗಿದೆ.ಯಾವುದನ್ನು ಹೇಗೆ ನಿರ್ಣಯ ಮಾಡಬೇಕು ಎಂಬುದರ ಕುರಿತು ಅವರಿಗೆ ಅವರದ್ದೆಯಾದೆ ವಿವೇಚನಾ ಅಧಿಕಾರವಿರುತ್ತದೆ. ಆದರೆ,ರಾಜ್ಯಪಾಲರನ್ನು ತಮ್ಮ ದುರುದ್ದೇಶಕ್ಕಾಗಿ, ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾದ ಕಾಂಗ್ರೆಸ್ ಸರ್ಕಾರದ ನಡೆ ತೀವ್ರ ಖಂಡನೀಯ ಎಂದರು.
ವಿಶೇಷ ಅಧಿವೇಶನದಲ್ಲಿ ಸರ್ಕಾರದ ಭಾಷಣವನ್ನು ಓದಿಸುವ ನೆಪದಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ, ಯೋಜನೆಗಳ ವಿರುದ್ಧ ರಾಜಕೀಯ ಮಾಡುವ ಕೆಲಸ ಕಾಂಗ್ರೆಸ್ ಮಾಡಿದ್ದು,ರಾಜ್ಯಪಾಲರೊಂದಿಗೆ ನಡೆದುಕೊಂಡ ಕಾಂಗ್ರೆಸ್ ನಡೆ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಸೇರಿ ಇತರರು ಇದ್ದರು.



